ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ ಎಂ ಸಿ ಸುಧಾಕರ್, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿಬಿಎ ಆಯುಕ್ತ ಮಹೇಶ್ವರ ರಾವ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು ಒಟ್ಟು 27,607.26 ಕೋಟಿ ರೂ. ಬಂಡವಾಳ ಹೂಡಿಕೆಯಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ. ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.
ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ತೇಜಸ್ ನೆಟ್ ವರ್ಕ್ಸ್ 542.19 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ ಬಂಡವಾಳ ಹೂಡಲಿವೆ
ಗ್ರಾಸಿಂ ಇಂಡಸ್ಟ್ರೀಸ್ 1,386 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ 80 ಕೋಟಿ ರೂ. ಮತ್ತು ಬಾಲಾಜಿ ವೇಫರ್ಸ್ ಕಂಪನಿಯು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಸಚಿವ ಎಂಬಿ ಪಾಟೀಲ್ ವಿವರಿಸಿದರು.

