ಯುವ ನಿಧಿ ಯೋಜನೆ ನೋಂದಣಿ ಬಗ್ಗೆ ಜಿಲ್ಲಾದ್ಯಂತ ಅರಿವು ಮೂಡಿಸಿ: ಮೈಸೂರು ಡಿಸಿ ಜಿ.ಲಕ್ಷ್ಮೀಕಾಂತ ರೆಡ್ಡಿ

Most read

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ 2023 ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆಗೆ ಇದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಆಧಿಕಾರಿಗಳಿಗೆ ನೀಡುವಂತೆ ತಿಳಿಸಿ, ಜಿಲ್ಲೆಯ ಅರ್ಹ ಪದವಿ, ಡಿಪ್ಲೋಮಾ, ಪದವೀಧರರು ಸರ್ಕಾರದ ಯೋಜನೆಯ ನೆರವು ಪಡೆಯುವಂತೆ ತಿಳಿಸಿದರು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ಹಂತದಲ್ಲಿ ಅಭ್ಯರ್ಥಿಗಳ ಹಾಜರಿ ಕಡ್ಡಾಯವಲ್ಲವಾಗಿದ್ದು, ಅಭ್ಯರ್ಥಿಗಳು ನೀಡಿರುವ ದಾಖಲೆಯ ನೈಜತೆಯನ್ನು ಆಧರಿಸಿ ಅರ್ಜಿಯನ್ನು ತಿರಸ್ಕೃತ ಅಥವಾ ಅನುಮೋದನೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ ಎಂ ರಾಣಿಯವರು ಮಾತನಾಡಿ, ಇವರೆಗೂ ಮೈಸೂರು ಜಿಲ್ಲೆಯಲ್ಲಿ 6516 ಅಭ್ಯರ್ಥಿಗಳು ಇವನಿಗೆ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, 4279 ಅಭ್ಯರ್ಥಿಗಳ ಅರ್ಜಿಯನ್ನು ಅನುಮೋದಿಸಲಾಗಿರುತ್ತದೆ. ಇನ್ನುಳಿದ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ ಚಾಲ್ತಿಯಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25ನೇ ತಾರೀಕಿನಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಸ್ವಯಂ ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರನಗದು ವರ್ಗಾವಣೆಯಾಗುವುದಿಲ್ಲ ಎಂದು ತಿಳಿಸಿದರು.

More articles

Latest article