US ಇಂಡಿಯಾ ಬಿಸಿನೆಸ್ ಕೌನ್ಸಿಲ್ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆ: ಸಿಎಂ ಭಾಷಣದ ಮುಖ್ಯಾಂಶಗಳು

Most read

ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಪೋಷಿಸುವ ವಾತಾವರಣವನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಕರ್ನಾಟಕ ಅಪಾರ ಅವಕಾಶಗಳನ್ನು ಒದಗಿಸುವ ರಾಜ್ಯವಾಗಿದ್ದು, ನಮ್ಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇವುಗಳನ್ನು ಬಳಸಿಕೊಳ್ಳಲು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಯು.ಎಸ್. ಇಂಡಿಯಾ ಬಿಸಿನೆಸ್ ಕೌನ್ಸಿಲ್ ಪ್ರತಿನಿಧಿಗಳೊಂದಿಗೆ ಮಂಗಳವಾರ ನಡೆದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಅಭಿವೃದ್ಧಿ ಮತ್ತು ಯಶಸ್ಸಿಗೆ ಪೂರಕವಾದ ವಾತಾವರಣವನ್ನು ಸೃಜಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದರು.

ಕರ್ನಾಟಕ ವೈವಿಧ್ಯಮಯ ಸಂಪನ್ಮೂಲಗಳ ನಾಡು. ಕೌಶಲ್ಯಭರಿತ ಕಾರ್ಯಪಡೆಯಿಂದ ಹಿಡಿದು ನೈಸರ್ಗಿಕ ಸಂಪತ್ತಿನವರೆಗೆ, ವೇಗವಾಗಿ ಬೆಳೆಯುತ್ತಿರುವ ಸ್ಟಾರ್ಟ್ ಅಪ್ ಸಂಸ್ಕೃತಿಯಿಂದ ಹಿಡಿದು ಸದೃಢ ಉತ್ಪಾದನಾ ತಳಪಾಯ ಇಲ್ಲಿದೆ. ರಾಜ್ಯವು ಜಗತ್ತಿನ ಮುಂಚೂಣಿಯಲ್ಲಿರುವ ಐ.ಟಿ ಕಂಪನಿಗಳಿಗೆ, ಬಯೋ ಟೆಕ್ನಾಲಜಿ ಉದ್ಯಮಗಳಿಗೆ ಮತ್ತು ಸ್ಟಾರ್ಟ್ ಅಪ್ ಗಳಿಗೆ ತವರೂರಾಗಿದೆ. ನಾವೀನ್ಯತೆ, ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಹಾಗೂ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿ ನಮ್ಮ ನೀತಿಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ವ್ಯಾಪಾರ -ವ್ಯವಹಾರಗಳಿಗೆ ಮುಕ್ತವಾಗಿದೆ. ಕರ್ನಾಟಕದಲ್ಲಿರುವ ಉತ್ತಮ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ಆಹ್ವಾನಿಸುತ್ತೇನೆ. ಐಟಿ-ಬಿಟಿ, ಏರೋಸ್ಪೇಸ್, ಅಥವಾ ಇನ್ಯಾವುದೇ ಕ್ಷೇತ್ರವಿರಲಿ, ಜಾಗತಿಕ ಸವಾಲುಗಳನ್ನು ಎದುರಿಸಲು ನಿಮ್ಮ ಸಹಯೋಗದೊಂದಿಗೆ ಒಟ್ಟಾಗಿ ಪರಿಹಾರಗಳನ್ನು ಕಂಡುಕೊಳ್ಳಲು ನಾವು ಸಿದ್ಧರಿದ್ದೇವೆ. ಬೆಂಗಳೂರು ಕರ್ನಾಟಕದ ರಾಜಧಾನಿ ಮಾತ್ರವಲ್ಲದೆ ಭಾರತದ ಸಿಲಿಕಾನ್ ವ್ಯಾಲಿ ಕೂಡ ಹೌದು. ಈ ನಗರವು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಯಲ್ಲಿರುವುಲ್ಲದೇ ನಾವೀನ್ಯತೆ, ಉದ್ಯಮಶೀಲತೆ ಮತ್ತು ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯ ಕೇಂದ್ರವಾಗಿ ಮುಂದುವರೆದಿದೆ ಎಂದರು.

ಕರ್ನಾಟಕ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯೆ ಇರುವ ಸದೃಢ ಮತ್ತು ಕ್ರಿಯಾತ್ಮಕ ಪಾಲುದಾರಿಕೆಗೆ ಇಂದಿನ ಚರ್ಚೆ ಸಾಕ್ಷಿಯಾಗಿದೆ. ಸಭೆಯಲ್ಲಿ ಕೇವಲ ವ್ಯಾವಹಾರಿಕ ಅವಕಾಶಗಳನ್ನಷ್ಟೇ ಚರ್ಚೆ ಮಾಡಿಲ್ಲ. ಹಿಂದೆಂದಿಗಿಂತಲೂ ಹೆಚ್ಚಿನ ಸಂಪರ್ಕ ಹೊಂದಿರುವ ಹಾಗೂ ಭವಿಷ್ಯದಲ್ಲಿ ಹೆಚ್ಚು ಸಮೃದ್ಧಿಯನ್ನು ತರುವ ನೀಲನಕ್ಷೆಯನ್ನು ರೂಪಿಸುತ್ತಿದ್ದೇವೆ. ಕೈಗೊಂಡ ಸಹಯೋಗ ಹಾಗೂ ಸಂಪರ್ಕಗಳು ಕರ್ನಾಟಕ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಪರಸ್ಪರ ಲಾಭದಾಯಕ ಫಲಿತಾಂಶಗಳಿಗೆ ಎಡೆಮಾಡಿಕೊಡಲಿವೆ. ಸಮೃದ್ಧಿ, ಪಾಲುದಾರಿಕೆ ಮತ್ತು ಪ್ರಗತಿಯ ಭವಿಷ್ಯದತ್ತ ಒಟ್ಟಾಗಿ ಹೆಜ್ಜೆಯಿಡೋಣ ಎಂದು ಅವರು ಹೇಳಿದರು.

More articles

Latest article