ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಸಚಿವ ಎಂ.ಬಿ.ಪಾಟೀಲ್ ಗೆ ಕೇಂದ್ರ ಸಚಿವ HDK ಭರವಸೆ

Most read

ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು; ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ.ಪಾಟೀಲ್ ಅವರಿಗೆ ಹೇಳಿದರು.

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು; ಎಂ.ಬಿ.ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ Hmt ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು.

ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

More articles

Latest article