ಕಾರವಾರ: ಪದ್ಮಶ್ರೀ ಪುರಸ್ಕೃತೆ ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 88 ವರ್ಷದ ಇವರು . ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ರಾತ್ರಿವರೆಗೂ ಕುಟುಂಬ ಸದಸ್ಯರೊಂದಿಗೆ ಮಾತನಾಡಿಕೊಂಡಿದ್ದರು. ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ ಅವರು ಜನಪದ ಹಾಡುಗಳನ್ನು ಹಾಡುವುದರ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದರು. ಸುಕ್ರಜ್ಜಿ ಎಂದೇ ಖ್ಯಾತಿ ಹೊಂದಿದ್ದ ಇವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಜನಪ್ರಿಯರಾಗಿದ್ದರು. ಬಡಗೇರಿ ಗ್ರಾಮದಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಿದ್ದರಿಂದ ಅದನ್ನು ತಡೆಯಲು ಹಲವು ದಶಕಗಳ ಹಿಂದೆ ಜನಾಂದೋಲನ ನಡೆಸಿದ್ದರು. 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.
ಸುಕ್ರಜ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ ಪಾಲ್ಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.