ಬೆಂಗಳೂರು: ಕೆಲಸ ಮಾಡುವವರಿಗೆ ಮಾತ್ರ ಪಕ್ಷದಲ್ಲಿ ಹುದ್ದೆ ನೀಡುವಂತೆ ಎಐಸಿಸಿ ಸೂಚನೆ ನೀಡಿದೆ. ಈ ವಿಚಾರವಾಗಿ ಸ್ಥಳೀಯ ಮಟ್ಟದಿಂದ ವರದಿ ತರಿಸಿಕೊಂಡಿದ್ದು, ಸೂಕ್ತ ಮತ್ತು ಸಮಪರ್ಪಕವಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಸಕ್ತಿ ಇಲ್ಲದವರ ಜಾಗಕ್ಕೆ ಆಸಕ್ತಿ ಇರುವವರನ್ನು ನೇಮಿಸಿ, ಪದಾಧಿಕಾರಿಗಳ ಪಟ್ಟಿಯನ್ನು ಶೀಘ್ರ ಅಂತಿಮಗೊಳಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಿಗಿಟ್ಲೆಯಂತೆ ಸುತ್ತುವವರನ್ನು ನೇಮಿಸಿ ಪ್ರಯೋಜನವಿಲ್ಲ. ತಾಲ್ಲೂಕಿನಲ್ಲಿ ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದರು.
ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ ಎಂದೂ ಶಿವಕುಮಾರ್ ಹೇಳಿದರು.