ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಅಂತೆ–ಕಂತೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಶ ಫೌಂಡೇಶನ್ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಕಾರ್ಯಕ್ರಮಕ್ಕೆ ಹೋಗಿದ್ದರು. ಇದರ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದಕ್ಕೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇಲ್ಲ. ಈ ವಿಷಯ ಕುರಿತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಏನು ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದರು.
ಎಸ್ ಸಿಪಿ/ ಟಿಎಸ್ ಪಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಜನಾಂದೋಲನ ಹಮ್ಮಿಕೊಳ್ಳುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು ಕೇವಲ ರಾಜಕೀಯಕ್ಕಾಗಿ ಹೋರಾಟ ಮಾಡುವುದಲ್ಲ. ಕಾಯ್ದೆ ಮಾಡಿರುವುದೇ ನಾವು. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಕಾಯ್ದೆ ಜಾರಿ ಮಾಡಿದ್ದೇವೆ. ನಾವು ತಂದಿರುವ ಕಾಯ್ದೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ಕೆಲಸವನ್ನು ಬಿಜೆಪಿ ನಾಯಕರು ಮಾಡಲಿ. ಇತರೆ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಲ್ಲಿ ಎಸ್ಸಿಪಿ/ ಟಿಎಸ್ಪಿ ಕಾಯ್ದೆ ಜಾರಿ ಮಾಡುವ ಬದ್ಧತೆಯನ್ನು ಬಿಜೆಪಿ ನಾಯಕರು ತೋರಲಿ. ಅದನ್ನು ಬಿಟ್ಟು ರಾಜಕೀಯ ಲಾಭಕ್ಕಾಗಿ ಮಾತನಾಡಬಾರದು ಎಂದು ಮಹದೇವಪ್ಪ ಬಿಕೆಪಿ ಮುಖಂಡರನ್ನು ಕುಟುಕಿದರು.