ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್ ಪಂದ್ಯಾವಳಿ ಸಂಧರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಿದೆ ಎಂದು ಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕಳೆದ ಬಾರಿ ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾದಾಗ ಸಂಸ್ಕರಿಸಿದ ನೀರಿನ ಬಳಕೆಗೆ ಉತ್ತೇಜನ ನೀಡಲಾಗಿತ್ತು. ಈ ಬಾರಿಯೂ ಐಐಎಸ್ ಸಿ ವಿಜ್ಞಾನಿಗಳು ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಲಿರುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ಜಲಮಂಡಳಿ ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಸಾಕಷ್ಟು ಜಾಗೃತಿಯನ್ನು ಮೂಡಿಸಲು ಮುಂದಾಗಿದೆ. ಕುಡಿಯುವ ಹಾಗೂ ಅಡುಗೆಗೆ ಹೊರತುಪಡಿಸಿ ಬಹಳಷ್ಟು ದಿನನಿತ್ಯದ ಚಟುವಟಿಕೆಗಳೀಗೆ ಸಂಸ್ಕರಿಸಿದ ನೀರನ್ನು ಬಳಸಬಹುದಾಗಿದೆ. ದೇಶದ ಗಮನ ಸೆಳೆಯುವಂತಹ ಐಪಿಎಲ್ ಕ್ರೀಡಾ ಕೂಟಕ್ಕೆ ಅಗತ್ಯವಿರುವ ನೀರಿನ ಅವಶ್ಯಕತೆಯನ್ನು ಪೂರೈಸುವು ನಿಟ್ಟಿನಲ್ಲಿ ಸಂಸ್ಕರಿಸಿದ ಸರಬರಾಜು ನೀರನ್ನು ಸರಬರಾಜು ಮಾಡುವುದರಿಂದ ದೇಶಾದ್ಯಂತ ಇನ್ನಷ್ಟು ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಹೆಚ್ಚಿನ ಪ್ರಚಾರವಾಗಲಿದೆ ಈ ಹಿನ್ನಲೆಯಲ್ಲಿ ಈ ಬಾರಿಯೂ ಬೆಂಗಳೂರು ಜಲಮಂಡಳಿ ಸಂಸ್ಕರಿಸಿದ ನೀರಿನ ಸರಬರಾಜು ಮಾಡಲಿದೆ ಎಂದು ಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ ಗಳಷ್ಟು ನೀರಿನ ಅವಶ್ಯಕತೆ ಬೀಳುತ್ತದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿ ಕಳೆದ ವರ್ಷದಿಂದ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದೇ ವ್ಯವಸ್ಥೆಯನ್ನು ಈ ಬಾರಿಯೂ ಮುಂದುವರೆಸುವುದಾಗಿ ಅಧ್ಯಕ್ಷರು ತಿಳಿಸಿದರು.