ಕೋವಿಡ್‌ ಹಗರಣ: ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ವರದಿ ಸಲ್ಲಿಕೆ

Most read

ಬೆಂಗಳೂರು: ಕೋವಿಡ್ ಸಂದರ್ಭದ ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಸರ್ಕೋಕಾರದಲ್ಲಿ ಕೋವಿಡ್‌ ನಿಯಂತ್ರಣ ಮತ್ತು ನಿರ್ವಹಣೆಯ ಹೆಸರಿನಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ  ಅಕ್ರಮಗಳ ಕುರಿತ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಸರ್ಕಾರ ಆಯೋಗ ರಚಿಸಿತ್ತು.

ನ್ಯಾ. ಕುನ್ಹಾ ಅವರು ಜಿಲ್ಲಾ ನ್ಯಾಯಾಧೀಶ, ಹೈಕೋರ್ಟ್‌ ರಿಜಿಸ್ಟ್ರಾರ್‌, ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದವರು. ಐದು ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿದ ಕೀರ್ತಿ ಇವರದ್ದು.

ಕೋವಿಡ್‌ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ (ಪಿಎಸಿ) ವರದಿಯಲ್ಲಿರುವ ಅಂಶಗಳ ತನಿಖೆಯ ಜೊತೆಗೆ ಇನ್ನಷ್ಟು ವಿಷಯ ಕುರಿತು ತನಿಖೆ ನಡೆಸಲು ಸೂಚಿಸಿತ್ತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೋವಿಡ್‌ ಭ್ರಷ್ಟಾಚಾರ ಕುರಿತ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಬೇಕು ಎಂದು ಆಗ್ರಹಿಸಿದ್ದರು. ಅದನ್ನು ಬಿಜೆಪಿ ಸರ್ಕಾರ ನಿರಾಕರಿಸಿತ್ತು.

ಕೋವಿಡ್‌ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಒಲವು ಹೊಂದಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೂ ತಂದಿದ್ದರು. ಭ್ರಷ್ಟಾಚಾರ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪಿಎಸಿ ಸಲ್ಲಿಸಿದ ವರದಿಯಲ್ಲಿ ಈ ಬಗ್ಗೆ ಮಾಹಿತಿಗಳಿವೆ. ಹೀಗಾಗಿ, ತನಿಖೆ ನಡೆಸುವುದು ಸೂಕ್ತ ಎಂದು ಪ್ರತಿಪಾದಿಸಿದ್ದರು.

ಕೋವಿಡ್‌ ಅವಧಿಯಲ್ಲಿ ರೂ. 2,000 ಕೋಟಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿರುವ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಒತ್ತಾಯಿಸಿದ್ದರು. ಕೋವಿಡ್‌ ನಿಯಂತ್ರಣದ ಹೆಸರಿನಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಕುರಿತು ಪ್ರತಿಷ್ಠಿತ ಸ್ವಾಯತ್ತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ಪಿಎಸಿ ತನ್ನ ವರದಿಯಲ್ಲಿ ಶಿಫಾರಸು ಮಾಡಿತ್ತು.

ಹಲವು ಪ್ರಕರಣಗಳಲ್ಲಿ ದುಬಾರಿ ದರ ತೆತ್ತು ಔಷಧಿ, ವೈದ್ಯಕೀಯ ಸಾಧನಗಳನ್ನು ಖರೀದಿಸಲಾಗಿದೆ.  ಕೋವಿಡ್‌ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ಶುಲ್ಕ ಪಾವತಿ ಸೇರಿದಂತೆ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಆರೋಗ್ಯ ಇಲಾಖೆಯು ಸಮಿತಿಯೊಂದಿಗೆ ಹಂಚಿಕೊಂಡಿಲ್ಲ ಎಂದು ವರದಿಯಲ್ಲಿ ಆಪಾದಿಸಲಾಗಿತ್ತು.

ಪಿಎಸಿಯ ಹಿಂದಿನ ಅಧ್ಯಕ್ಷರಾಗಿದ್ದ ಎಚ್‌.ಕೆ. ಪಾಟೀಲ ನೇತೃತ್ವದಲ್ಲಿ ಸಲ್ಲಿಸಿದ್ದ ವರದಿಗೆ ಹಿಂದಿನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮೋದನೆ ನೀಡಿರಲಿಲ್ಲ. 2020–21ನೇ ಸಾಲಿನಲ್ಲಿ ಪಿಎಸಿ ಅಧ್ಯಕ್ಷರಾಗಿದ್ದ, ಈಗಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವರದಿಯನ್ನು ಸಭಾಧ್ಯಕ್ಷರಿಗೆ ಸಲ್ಲಿಸಿದ್ದರು. ಇತ್ತೀಚೆಗೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವರದಿ ಮಂಡನೆಯಾಗಿತ್ತು.

More articles

Latest article