ಒಂದು ರೂ. ಲಂಚ ಪಡೆಯದೇ 1000  ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Most read

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ  1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿಂದೆ 1994-95 ರಲ್ಲಿ  ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಒಂದು ಲಕ್ಷ ಶಿಕ್ಷಕರನ್ನು ಲಂಚ ಅಥವಾ ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಿದ್ದರು. ಪ್ರಸ್ತುತ  ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ನೀವೆಲ್ಲಾ ಆಯ್ಕೆಯಾಗಿದ್ದೀರಿ.  9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ  ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಸಾಧ್ಯವಾದಷ್ಟೂ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.

ದಾಖಲೆಗಳನ್ನು ಕರಾರುವಾಕ್ಕಾಗಿಡುವುದು ಅವಶ್ಯಕ:

ನಮ್ಮ ದೇಶ ಗ್ರಾಮಗಳ ದೇಶ. ಕೃಷಿ ಪ್ರಮುಖವಾದ ಉದ್ಯೋಗವಾಗಿದ್ದುಹೆಚ್ಚು ಶೇ 60 ಕ್ಕೂ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲಾತಿಗಳು ಸರಿಯಾಗಿರಬೇಕು. ದಾಖಲೆಗಳನ್ನು ಬಹಳ ಕರಾರುವಾಕ್ಕಾಗಿ ಇಡುವುದು ಅವಶ್ಯಕ. ಆಧುನಿಕ ನಾಡಿನಲ್ಲಿ ತಂತ್ರಜ್ಞಾನ, ವಿಜ್ಞಾನ ಬೆಳೆದಿದೆ. ಈಗ ಪ್ರತಿಯೊಂದೂ ಡಿಜಿಟಲೀಕರಣವಾಗಿದೆ. ಆನ್ ಲೈನ್ ನಲ್ಲಿ ದಾಖಲಾತಿಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು.  ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು. ರೈತರಿಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

 ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಗ್ರಾಮ ಆಡಳಿತಾಧಿಕಾರಿಗಳು ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ಅವರ ಮೇಲೂ ಗೌರವ ವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು.  ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು, ಜನರಿಂದ ಆಯ್ಕೆಯಾದರೆ, ಸರ್ಕಾರದಿಂದ ಆಯ್ಕೆಯಾದ ಸರ್ಕಾರಿ ನೌಕರರು ಜನಸೇವೆಯನ್ನು ಅವರ ಧ್ಯೇಯವಾಗಿಸಬೇಕು.

ಕಂದಾಯ ಇಲಾಖೆಯದ್ದು ಅತ್ಯಂತ ಜವಾಬ್ದಾರಿಯುತ ಕೆಲಸ. ಇಲ್ಲಿ ಸುಧಾರಣೆಗಳನ್ನು ತರಬೇಕೆಂದು ಕೃಷ್ಣಬೈರೇಗೌಡರಿಗೆ ಸೂಚಿಸಲಾಗಿತ್ತು,ಅವರು  ಈಗಾಗಲೇ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಅವರಿಗೆ ಇನ್ನಷ್ಟ ಸುಧಾರಣೆಗಳನ್ನು  ತರುವ ಶಕ್ತಿ ಇದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅಧಿಕಾರಿಗಳು ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಬೇಕು:

ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಮಂಜೂ 9834 ಮಂಜೂರಾದ ಹುದ್ದೆಗಳಿಗೆ  ಲ್ಯಾಪ್‌ ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೆ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.

 ಭೂಮಿ ಬೀಟ್ ಕಾರ್ಯಕ್ರಮ:

ಕೃಷಿ, ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರ  ಹಾಗೂ ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿದೆಸೆಯಲ್ಲಿ ವ್ಯವಸಾಯ ಕೈಗೊಂಡ ಸಂದರ್ಭದಲ್ಲಿ ಪಕ್ಕದ ರೈತ ಜಮೀನನ್ನು ಅತಿಕ್ರಮಣ ಮಾಡಿದ್ದು, ಈ ಬಗ್ಗೆ ನಡೆದ ಪಂಚಾಯತಿಯ ಬಗ್ಗೆ ತಮ್ಮ ಅನುಭವ ಹಂಚಿಕೊಂಡ ಮುಖ್ಯಮಂತ್ರಿಗಳು, ಜಮೀನುಗಳನ್ನು ಅತಿಕ್ರಮಣದ ಇಂತಹ ಸಮಸ್ಯೆಗಳನ್ನು ನಿವಾರಿಸಲು ಭೂಮಿ ಬೀಟ್ ಕಾರ್ಯಕ್ರಮ ಅನುಕೂಲ ಕಲ್ಪಿಸಿದೆ ಎಂದರು.

ರೈತರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ:

 ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಶುಭಹಾರೈಸಿದರು.

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು.  ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ.

ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ, ಶಾಸಕ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ , ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ  ಉಪಸ್ಥಿತರಿದ್ದರು.

More articles

Latest article