ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಯಾದಗಿರಿ, ದಾವಣಗೆರೆಯ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಬೆಂಗಳೂರಿನ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀನಿವಾಸಮೂರ್ತಿ, ಕೋಲಾರ ತಾಲ್ಲೂಕಿನ ಭೂಮಾಪನಾ ಇಲಾಖೆ ಸರ್ವೇ ಅಧಿಕಾರಿ ಸುರೇಶ್ ಬಾಬು ಜಿ., ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ. ರವಿ ಹಾಗೂ ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ ರಾಜೀವ್ ವೆಂಕಟಪ್ಪ ನಾಯಕ ಅವರಿಗೆ ಸಂಬಂಧಿಸಿದ ನಿವಾಸ ಮತ್ತಿತರ ಸ್ಥಳಗಳ ಮೇಲೆ ದಾಳಿ ನಡೆದಿದೆ.