ಬೆಂಗಳೂರು: ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀಕರಣ ಗೊಳಿಸಲು ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಭಗವಾನ್ ಶ್ರೀ ಬುದ್ಧರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸರ್ಕಾರ ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವನಾಗಿರುವ ಈ ಅವಧಿಯಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿಯ ಘೋಷಣೆ ಮಾಡಿ ಆಚರಣೆ ಮಾಡುತ್ತಿರುವುದು ನನ್ನ ಪಾಲಿನ ಅತ್ಯಂತ ಪುಣ್ಯದ ಕೆಲಸ ಎಂದು ಭಾವಿಸಿದ್ದೇನೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಜಯಂತಿ ಆಚರಣೆಗೆ ಅನುಮತಿ ಕೊಟ್ಟು ಉಪಕರಿಸಿದ್ದಾರೆ. ಪ್ರಸಕ್ತ ವರ್ಷದ ಆಯವ್ಯಯದಲ್ಲಿ ನಮ್ಮ ಸರ್ಕಾರ ಜೈನ,ಭೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ಮೀಸಲಿರಿಸಿದೆ ಎಂದು ತಿಳಿಸಿದರು.
ಮನುಷ್ಯ ಮನುಷ್ಯರ ನಡುವೆ ದ್ವೇಷ, ಅಸೂಯೆ ಬೆಳೆಯುತ್ತಿರುವ ಇಂದಿನ ಸಂದರ್ಭದಲ್ಲಿ ಭಗವಾನ್ ಬುದ್ಧರ ತತ್ವಾದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತಿವೆ. ರಾಜರು ರಾಜರಾಗಿರಲು ಮಾತ್ರ ಬಯಸುತ್ತಾರೆ. ರಾಜತ್ವದಿಂದ ಮನುಷ್ಯನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಜೀವನ ನಡೆಸುವುದು ಆಸಾಮಾನ್ಯ ಸಂಗತಿ. ಭಗವಾನ್ ಬುದ್ಧರು ಅದನ್ನು ಮಾಡಿ ತೋರಿಸಿದರು. ಅವರ ಶಾಂತಿ ತತ್ವ ಇಂದು ಎಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದರು. ಸಮಾರಂಭದಲ್ಲಿ ಶ್ರೀ ಭೋದಿದತ್ತ ಭಂತೇಜಿ, ಪೂಜ್ಯಶ್ರೀ ಬುದ್ದದತ್ತ ಭಂತೇಜಿ, ಹಿರಿಯ ಸಾಹಿತಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ ಎಂ ಗಾಯಿತ್ರಿ ಉಪಸ್ಥಿತರಿದ್ದರು.