ನವದೆಹಲಿ: ವಿದೇಶಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಗೆದುಕೊಂಡಿರುವ ನಿರ್ಧಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೆಶಾಂಗ ಸಚಿವ ಎಸ್ ಜೈಶಂಕರ್ ಅವರ ಮೌನವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಅಮೆರಿಕ ತೆಗೆದುಕೊಂಡಿರುವ ನಿರ್ಧಾರಗಳನ್ನು ಕುರಿತು ಚೀನಾ ತನ್ನ ವಿದ್ಯಾರ್ಥಿಗಳ ಬಗ್ಗೆ ತೀವ್ರವಾಗಿ ಪ್ರತಿಕ್ರಿಯಿಸಿದೆ ಮತ್ತು ಆತಂಕ ವ್ಯಕ್ತಪಡಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಬ್ಬರೂ “ದಿವ್ಯ ಮೌನ” ವಹಿಸಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕದ ಈ ಕ್ರಮದಿಂದ ಭಾರತೀಯ ವಿದ್ಯಾರ್ಥಿಗಳಿಗೆ ಯಾವ ರೀತಿಯ ಪರಿಣಾಮ ಉಂಟಾಗಲಿದೆ ಎಂಬ ಬಗ್ಗೆ ಸರ್ಕಾರ ತನ್ನ ಅಭಿಪ್ರಾಯ ತಿಳಿಸಬೇಕು ಎಂದೂ ಅವರು ಆಗ್ರಹಪಡಿಸಿದ್ದಾರೆ.
ವಿದೇಶಾಂಗ ಸಚಿವಾಲಯದ ಪ್ರಕಾರ, 2024 ರಲ್ಲಿ ಸುಮಾರು 3,37,630 ಭಾರತೀಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಹೋಗಿದ್ದಾರೆ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ವಿದೇಶಿ ವಿದ್ಯಾರ್ಥಿಗಳು ಭಾರತದಿಂದ ಬಂದವರೇ ಆಗಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.
ಅಂದರೆ ಸುಮಾರು 3.5 ಲಕ್ಷ ಭಾರತೀಯ ಕುಟುಂಬಗಳು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸಿ ಶಿಕ್ಷಣದ ಮೇಲೆ ಹೂಡಿಕೆ ಮಾಡಿದ್ದಾರೆ ಇಲ್ಲವೇ ಮಕ್ಕಳ ಶಿಕ್ಷಣಕ್ಕಾಗಿ ಸಾಲ ಪಡೆದಿದ್ದಾರೆ. ಇದೀಗ ಈ ವಿದ್ಯಾರ್ಥಿಗಳು, ಮತ್ತು ಹಿಂದಿನ ವರ್ಷಗಳಲ್ಲಿ ಹೋದವರು ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಾರೆ. 2025 ರಲ್ಲಿ ಹೋಗಲು ಯೋಜಿಸುತ್ತಿರುವ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಶಿಕ್ಷಣ ಪಡೆಯುವ ತಮ್ಮ ಬಯಕೆ ಈಡೇರುವುದೇ ಎಂದು ಆತಂಕ ಎದುರಿಸುತ್ತಿದ್ದಾರೆ ಎಂದೂ ರಮೇಶ್ ಎಕ್ಸ್ ನಲ್ಲಿ ವಿವರಿಸಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಕೇವಲ ನಾಲ್ಕು ದಿನಗಳಲ್ಲಿ ನಿಲ್ಲಿಸಲಾಗಿದೆ ಎಂಬ ಅಧ್ಯಕ್ಷ ಟ್ರಂಪ್ ಅವರ ಹೇಳಿಕೆಗಳ ಬಗ್ಗೆಯೂ ಮೋದಿ ಹಾಗೂ ಜೈಶಂಕರ್ ಸಂಪೂರ್ಣವಾಗಿ ಮೌನ ತಾಳಿದ್ದಾರೆ. ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಭವಿಷ್ಯ ಕುರಿತು ಇಬ್ಬರೂ ಮುಖಂಡರು ಚಕಾರ ಎತ್ತಿಲ್ಲ ಎಂದು ರಮೇಶ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟ್ರಂಪ್ ಆಡಳಿತ ಹೊಸ ವಿದ್ಯಾರ್ಥಿ ವೀಸಾ ಸಂದರ್ಶನಗಳನ್ನು ಸ್ಥಗಿತಗೊಳಿಸುತ್ತಿದೆ. ಭಾರತೀಯ ವಿದ್ಯಾರ್ಥಿಗಳ ವೀಸಾ ಅರ್ಜಿಗಳನ್ನು ಅರ್ಹತೆಯ ಆಧಾರದ ಮೇಲೆ ಅಮೆರಿಕ ಪರಿಗಣಿಸುತ್ತದೆ ಎಂದು ಭಾರತ ಕಳೆದ ಗುರುವಾರ ಹೇಳಿದೆ. ಅಮೆರಿಕ ತನ್ನ ವೀಸಾ ಆಡಳಿತದಲ್ಲಿ ತಂದಿರುವ ಬದಲಾವಣೆಗಳು ಭಾರತ ಸೇರಿದಂತೆ ವಿಶ್ವದಾದ್ಯಂತ ವಿದ್ಯಾರ್ಥಿಗಳಲ್ಲಿ ವ್ಯಾಪಕ ಅನಿಶ್ಚಿತತೆಯನ್ನು ಹುಟ್ಟುಹಾಕಿವೆ ಎಂದಿದ್ದಾರೆ.