ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಪಹಲ್ಗಾಮ್ ನಲ್ಲಿ ಪ್ರವಾಸಿರ ಮೇಲೆ ನಡೆದ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಚರ್ಚಿಸಲು ಪ್ರತಿಪಕ್ಷಗಳು ವಿಶೇಷ ಅಧಿವೇಶನ ಕರೆಯುವಂತೆ ಪದೇ ಪದೇ ಒತ್ತಾಯಿಸುತ್ತಲೇ ಬಂದಿವೆ. ಆದರೆ ವಿಪಕ್ಷಗಳ ಈ ಬೇಡಿಕೆಯನ್ನು ಎಮ್ ಡಿಎ ಸರ್ಕಾರ ತಿರಸ್ಕರಿಸುತ್ತಾ ಬಂದಿದೆ. ದ ನಾಯಕರು ವಿಶೇಷ ಅಧಿವೇಶನಕ್ಕೆ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಮುಂಗಾರು ಅಧಿವೇಶನವನ್ನು ಕರೆದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಗಾರು ಅಧಿವೇಶನಕ್ಕೆ ದಿನಾಂಕಗಳನ್ನು ಶಿಫಾರಸು ಮಾಡಿದೆ. ಅಧಿವೇಶನ ಕರೆಯುವ ಶಿಫಾರಸು ಪತ್ರವನ್ನು ರಾಷ್ಟ್ರಪತಿಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರತಿ ಅಧಿವೇಶನವೂ ನಮಗೆ ವಿಶೇಷ ಅಧಿವೇಶನವಾಗಿದೆ ಎಂದ ಅವರು, ಎಲ್ಲಾ ಪ್ರಮುಖ ವಿಷಯಗಳನ್ನು ಸಂಸತ್ತಿನ ನಿಯಮಗಳ ಅಡಿಯಲ್ಲಿ ಚರ್ಚಿಸಲು ಅವಕಾಶವಿದೆ ಎಂದು ಹೇಳಿದರು.
ಚರ್ಚಿಸಬೇಕಾದ ವಿಷಯಗಳ ಬಗ್ಗೆ ಎರಡೂ ಸದನಗಳ ಸಲಹಾ ಸಮಿತಿಯು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.