ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಈವರೆಗಿನ ವಿಚಾರಣೆ ಮತ್ತು ವಸ್ತುಸ್ಥಿತಿ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸಿದೆ.
ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಣೆಯಿಂದ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ಘಟನೆಗೆ ಸಂಬಂಧಿಸಿದಂತೆ ನ್ಯಾಯಪೀಠ ಈ ಹಿಂದಿನ ವಿಚಾರಣೆ ವೇಳೆ ಕೇಳಿದ್ದ 9 ಪ್ರಶ್ನೆಗಳಿಗೆ ಉತ್ತರ ಸೇರಿದಂತೆ ಸುಮಾರು 300 ಪುಟಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಎಲ್ಲಾ ದಾಖಲೆಗಳು ಕನ್ನಡದಲ್ಲಿದ್ದು, ಎರಡು ದಿನಗಳಲ್ಲಿ ಇಂಗ್ಲಿಷ್ಗೆ ಅನುವಾದಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ವಿಷಯದಲ್ಲಿ ಸರ್ಕಾರ ಬಚ್ಚಿಡುವಂತಹುದ್ದು ಏನೂ ಇಲ್ಲ. ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಸಂಭವಿಸದಂತೆ ಹೇಗೆ ತಡೆಯಬಹುದು ಎಂಬ ವಿಚಾರದಲ್ಲಿ ಸಂಪೂರ್ಣ ಪಾರದರ್ಶಕ ನಡೆ ಹೊಂದಿದೆ ಎಂದು ಕೋರ್ಟ್ ಗಮನಕ್ಕೆ ತಂದರು.
ನಿರ್ದೇಶನ: ‘ದುರಂತಕ್ಕೆ ಸಂಬಂಧಿಸಿದ ಎಲ್ಲಾ ಪತ್ರ ವ್ಯವಹಾರ, ಸಂವಹನಗಳನ್ನು (ಆಫ್ಲೈನ್ ಮತ್ತು ಆನ್ಲೈನ್, ವಾಟ್ಸ್ ಆ್ಯಪ್ ಸಂದೇಶವೂ ಸೇರಿದಂತೆ) ಮುಖ್ಯ ಕಾರ್ಯದರ್ಶಿ ವಶಕ್ಕೆ ಒಪ್ಪಿಸಬೇಕು. ಜಿಲ್ಲಾಧಿಕಾರಿ ನೇತೃತ್ವದ ವಿಚಾರಣೆ ಮತ್ತು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರ ಏಕಸದಸ್ಯ ವಿಚಾರಣಾ ಆಯೋಗ, ಯಾವ ನಿರ್ದಿಷ್ಟ ಉದ್ದೇಶವನ್ನು ವಹಿಸಿಕೊಂಡು ಯಾವ ಯಾವ ವಿಷಯಗಳನ್ನು ಕುರಿತು ವಿಚಾರಣೆ ನಡೆಸಬೇಕು ಎಂಬ ಮಾಹಿತಿಯನ್ನೂ ಇದರಲ್ಲಿ ಸೇರಿಸಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಇದೇ ವೇಳೆ ಹಿರಿಯ ವಕೀಲ ಎಂ.ಬಿ.ನರಗುಂದ ಅವರು, ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಅನೇಕ ಮಂದಿ ಮೃತಪಟ್ಟಿದ್ದರು. ಈ ಘಟನೆಯ ಮೇಲೆ ಹೈಕೋರ್ಟ್ ನಿಗಾ ವಹಿಸಿತ್ತು. ಈ ಪ್ರಕರಣದಲ್ಲೂ ಅದೇ ರೀತಿ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಮಧ್ಯಂತರ ಅರ್ಜಿದಾರರಾಗಲು ಬಯಸಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕೊಂಡಜ್ಜಿ ಪರ ಹಿರಿಯ ವಕೀಲ ಕೆ.ದಿವಾಕರ್, ರಾಜ್ಯದಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್ ಡಿಆರ್ ಎಫ್) ಮಾರ್ಗಸೂಚಿಗಳನ್ನು 2014ರಿಂದಲೂ ಪಾಲನೆ ಮಾಡಲಾಗುತ್ತಿಲ್ಲ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಇದೇ ವೇಳೆ ನ್ಯಾಯಪೀಠ, ‘ಮಧ್ಯಂತರ ಅರ್ಜಿದಾರರಾಗಲು ಬಯಸಿರುವವರ ಬಗ್ಗೆ ಈ ಹಂತದಲ್ಲಿ ಯಾವುದೇ ತೀರ್ಮಾನ ಪ್ರಕಟಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿತು.