ನವದೆಹಲಿ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ರದ್ದು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
2016ರ ಮೇ ತಿಂಗಳಲ್ಲಿ ನಡೆದ ಈ ಕೊಲೆಯ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿರುವುದು ಕಂಡು ಬಂದಿದೆ. ಇದು, ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್, ಆರೋಪಿಗೆ ಜಾಮೀನು ಮಂಜೂರು ಮಾಡಿದ್ದರೂ ವಿಚಾರಣಾ ನ್ಯಾಯಾಲಯವು ಜಾಮೀನನ್ನು ರದ್ದುಪಡಿಸಬಹುದು ಎಂದೂ ಪೀಠ ತಿಳಿಸಿತ್ತು.
ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಇಂದು ನ್ಯಾಯಾಲಯಕ್ಕೆ ಶರಣಾಗಬೇಕಿತ್ತು. ಶರಣಾಗಲು ಸಮಾಯಾವಕಾಶ ಕೋರಿ ಅವರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಕುಲಕರ್ಣಿ ಹಾಲಿ ಶಾಸಕರಾಗಿದ್ದಾರೆ ಮತ್ತು ಕರ್ನಾಟಕ ನೀರು ಸರಬರಾಜು ಮಂಡಳಿಯ ಅಧ್ಯಕ್ಷರಾಗಿರುವುದರಿಂದ ಈ ವಾರ ನಿಗದಿಯಾಗಿರುವ ಸಭೆಯಲ್ಲಿ ಭಾಗವಹಿಸಬೇಕಾಗಿದೆ. ಆದ್ದರಿಂದ ಶರಣಾಗತಿಗೆ ಒಂದು ವಾರ ಕಾಲಾವಕಾಶ ನೀಡಬೇಕೆಂದು ಅವರ ಪರ ವಕೀಲರು ಮನವಿ ಸಲ್ಲಿಸಿದ್ದರು.
ಮನವಿ ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠ, ಮನವಿಯನ್ನು ತಿರಸ್ಕರಿಸಲಾಗಿದ್ದು, ನ್ಯಾಯಾಲಯದ ಆದೇಶದ ಪ್ರಕಾರ ಶರಣಾಗತಿ ಆಗಲೇಬೇಕು ಎಂದು ಸೂಚಿಸಿದೆ.
ಶಾಸಕ ಕುಲಕರ್ಣಿ ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾಪರೋಕ್ಷವಾಗಿ ಅವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎನ್ನುವುದಕ್ಕೆ ನ್ಯಾಯಾಲಯದ ಬಳಿ ಸಾಕಷ್ಟು ದಾಖಲೆಗಳಿವೆ ಎಂದು ನ್ಯಾಯಪೀಠ ಹೇಳಿದೆ. ಕಳೆದ ಶುಕ್ರವಾರದಿಂದ (ಜೂನ್ 06) ಒಂದು ವಾರದೊಳಗೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ ಅಥವಾ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.