ಬೆಂಗಳೂರು: ಬೈಕ್ ಟ್ಯಾಕ್ಸಿಗಳನ್ನು ನಿಯಂತ್ರಿಸಲು ಸಮಗ್ರ ನೀತಿಯನ್ನು ಹೊರಡಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದ ಏಕಸದಸ್ಯ ತೀರ್ಪನ್ನು ತಡೆಹಿಡಿಯಲು ರಾಜ್ಯ ಹೈಕೋರ್ಟ್ನ ವಿಭಾಗೀಯ ಪೀಠ ನಿರಾಕರಿಸಿದೆ. ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ
ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ, ಜೂನ್ 24 ರಂದು ಅರ್ಹತೆಯ ಆಧಾರದ ಮೇಲೆ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಬೈಕ್ ಟ್ಯಾಕ್ಸಿಗೆ ಅನುಮತಿ ನೀಡದಿರಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಏಕಸದಸ್ಯ ಪೀಠದ ನಿರ್ದೇಶನವನ್ನು ತಡೆಹಿಡಿಯಲು ದ್ವಿಸದಸ್ಯ ಪೀಠ ನಿರಾಕರಿಸಿದೆ. ಈ ವಿಷಯವು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಇದೇ ವೇಳೆ ಕೋರ್ಟ್ ಅಭಿಪ್ರಾಯಪಟ್ಟಿದೆ.
ಏಪ್ರಿಲ್ 2 ರ ಆದೇಶದ ಮೂಲಕ ನ್ಯಾಯಮೂರ್ತಿ ಬಿ. ಶ್ಯಾಮ್ ಪ್ರಸಾದ್ ಕರ್ನಾಟಕದಲ್ಲಿ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ಆರು ವಾರಗಳ ಒಳಗೆ ಸ್ಥಗಿತಗೊಳಿಸಲು ಆದೇಶ ಹೊರಡಿಸಿದ್ದರು. ಸರ್ಕಾರವು ನೀತಿ ಬದಲಾವಣೆ ಮಾಡಲು ನಿರ್ಧರಿಸದ ಹೊರತು ಮತ್ತು ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ರೂಪಿಸದ ಹೊರತು, ಅಂತಹ ವಾಹನಗಳನ್ನು ಓಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.
ಕರ್ನಾಟಕದಲ್ಲಿ ಬೈಕ್ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕಾದ ಆರು ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದರೂ, ರಾಪಿಡೊ, ಓಲಾ ಮತ್ತು ಉಬರ್ ಸೇರಿದಂತೆ ಬಾಧಿತ ಬೈಕ್ ಟ್ಯಾಕ್ಸಿ ನಿರ್ವಾಹಕರು ಈ ಗಡುವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಪರಿಗಣಸಿದ್ದ ನ್ಯಾಯಮೂರ್ತಿಗಳು ಅಂತಿಮವಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳನ್ನು ಮುಕ್ತಾಯಗೊಳಿಸುವ ಗಡುವನ್ನು ಜೂನ್ 15 ರವರೆಗೆ ವಿಸ್ತರಿಸಿದ್ದರು.
ನಂತರ, ಏಪ್ರಿಲ್ 2 ರ ತೀರ್ಪನ್ನು ಪ್ರಶ್ನಿಸಿ ಜೂನ್ 11 ರಂದು ಎಎನ್ ಐ ಟೆಕ್ನಾಲಜೀಸ್ (ಓಲಾ ಮಾಲೀಕತ್ವ) ತನ್ನ ಮೇಲ್ಮನವಿಯನ್ನು ಸಲ್ಲಿಸಿದರೆ, ಜೂನ್ 2 ರಂದು ಉಬರ್ ತನ್ನ ಮೇಲ್ಮನವಿಯನ್ನು ಸಲ್ಲಿಸಿದೆ.
ಮೇಲ್ಮನವಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಏಕ ಸದಸ್ಯ ಪೀಠದ ಆದೇಶವನ್ನು ತಡೆಹಿಡಿಯುವಂತೆ ವಿಭಾಗೀಯ ಪೀಠವನ್ನು ಒತ್ತಾಯಿಸಿ 1988 ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ಈಗಾಗಲೇ ಅಸ್ತಿತ್ವದಲ್ಲಿರುವ ಚೌಕಟ್ಟಿನ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸಬಹುದು ಎಂದು ಅವರು ವಾದಿಸಿದ್ದರು