ಬೆಂಗಳೂರು: ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು ಎಂದೂ ಒತ್ತಿ ಹೇಳಿದೆ.
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಕ್ರಿಕೆಟ್ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕುರಿತ ಸ್ವಯಂ ಪ್ರೇರಿತ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಮತ್ತು ನ್ಯಾಯಾಧೀಶ ಸಿಎಂ ಜೋಶಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿತು.
ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ವಾದಿಸಿ ಮಾಹಿತಿ ಬಹಿರಂಗಪಡಿಸುವಿಕೆಯಿಂದ ಸರ್ಕಾರ ಹಿಂಜರಿಕೆಯಿಂದ ಹಿಂದೆ ಸರಿಯುವುದಿಲ್ಲ. ಆದರೆ ನಡೆಯುತ್ತಿರುವ ವಿಚಾರಣೆಗಳನ್ನು ಪೂರ್ವಾಗ್ರಹದಿಂದ ತಪ್ಪಿಸಲು ಬಯಸಿದ್ದು, ಮುಂದಿನ ವಾರ ಎರಡು ವರದಿಗಳನ್ನು ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು.
ತನಿಖಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಗೆ ಸ್ಪಷ್ಟ ಆದ್ಯತೆ ನೀಡುವಂತೆ ನ್ಯಾಯಾಲಯ ಸೂಚಿಸಿತು. ತನಿಖಾ ಸಂಸ್ಥೆಗಳ ವರದಿ ಬರುವವರೆಗೂ 20 ರಿಂದ 25 ದಿನಗಳ ಕಾಲ ವಿಚಾರಣೆ ಮುಂದೂಡುವಂತೆ ಶಶಿಕಿರಣ್ ಕೋರಿದರು. ಆದರೆ, ಇದನ್ನು ಪರಿಗಣಿಸದ ನ್ಯಾಯಾಲಯ, ಕೆಎಸ್ ಸಿಎ, ಆರ್ ಸಿಬಿ ಮತ್ತು ಡಿಎನ್ ಎ ನೆಟ್ ವರ್ಕ್ ಗೆ ನೋಟಿಸ್ ನೀಡಲು ಆದೇಶಿಸಿ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿತು.