ಮುಂಬೈ: ಕರ್ನಾಟಕ ರಾಜ್ಯದ ಜತೆ ಗಡಿ ಸಮಸ್ಯೆ ಪರಿಹರಿಸುವ ಪ್ರಯತ್ನವಾಗಿ ಮಹಾರಾಷ್ಟ್ರ ಸರ್ಕಾರ ಉನ್ನತ ಅಧಿಕಾರಿಗಳ ಸಮಿತಿಯನ್ನು ಪುನರ್ ರಚಿಸಿದೆ ಎಂದು ತಿಳಿದು ಬಂದಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿರುವುದರಿಂದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನೇತೃತ್ವದ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ಖಚಿತಪಡಿಸಿವೆ.
ಸರ್ಕಾರಗಳು ಬದಲಾದಂತೆ ಸಮಿತಿಯನ್ನೂ ಪುನರ್ ರಚಿಸುತ್ತಾ ಬರಲಾಗಿದೆ. 2022ರಲ್ಲಿ ಮಹಾಯುತಿ ಮೈತ್ರಿಕೂಟವು ಏಕನಾಥ ಶಿಂಧೆ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದಾಗ ಸಮಿತಿ ಪುನರ್ ರಚನೆ ಮಾಡಲಾಗಿತ್ತು. ಈಗ, ಹೊಸ ಸರ್ಕಾರ ರಚನೆಯಾದ ಬಳಿಕ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನೇತೃತ್ವದಲ್ಲಿ ಸಮಿತಿಯನ್ನು 18 ಸದಸ್ಯರ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದೆ. ಇಬ್ಬರು ಉಪಮುಖ್ಯಮಂತ್ರಿಗಳು, ಮಾಜಿ ಸಿಎಂ ನಾರಾಯಣ ರಾಣೆ, ಶರದ್ ಪವಾರ್ ಮತ್ತು ಪೃಥ್ವಿರಾಜ ಚೌಹಾಣ್ ಸೇರಿದಂತೆ ಹಲವು ಪ್ರಮುಖರು ಸಮಿತಿಯ ಸದಸ್ಯರಾಗಿದ್ದಾರೆ.