ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ. 2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಸಂಪುಟ ಉಪಸಮಿತಿ ಶಿಫಾರಸಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕೇಂದ್ರದ ಮಾದರಿಯನ್ನೇ ಅನುಸರಿಸಿ ಮೀಸಲಾತಿಯನ್ನು ಮರುನಿಗದಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದಲ್ಲೂ ಬಡ ಕುಟುಂಬಗಳಿವೆ. ವಾಸಕ್ಕೆ ಮನೆ ಇಲ್ಲದವರ ಸಂಖ್ಯೆ ಹೆಚ್ಚಾಗಿದೆ. 2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಸಹ ಶೇ. 15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ಸೂಚಿಸಿತ್ತು. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ವಾಸ್ತವಂಶ ಅರ್ಥಮಾಡಿಕೊಳ್ಳದೆ ವಿರೋಧ ಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿವೆ ಎಂದು ಸಚಿವ ಜಮೀರ್ ಆಪಾದಿಸಿದ್ದಾರೆ.