ಬೆಂಗಳೂರು: ಮನೆ ಕೆಲಸದ ಹೆಂಗಸಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಅಸ್ತು ಎಂದಿದೆ.
ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐಆರ್, ದೋಷಾರೋಪ ಪಟ್ಟಿ ಮತ್ತು ಈ ಕುರಿತ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್ ಶಾಸಕ ಹಾಗೂ ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಎಚ್.ಡಿ.ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ರೇವಣ್ಣ ಅವರಿಗೆ ಸೀಮಿತಗೊಳಿಸಿ ಈ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಹಾಗಾಗಿ, ಪ್ರಜ್ವಲ್ ವಿರುದ್ಧದ ವಿಚಾರಣೆ ಮುಂದುವರಿಸಲು ಯಾವುದೇ ಅಡ್ಡಿಯಿಲ್ಲ ಎಂದರು. ಈ ಮಾತಿಗೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ಯಾವುದೇ ಅಭ್ಯಂತರ ಇಲ್ಲ ಎಂದರು.
ಇದನ್ನು ಪರಿಗಣಿಸಿದ ನ್ಯಾಯಾಲಯ ರೇವಣ್ಣ ವಿರುದ್ಧದ ನ್ಯಾಯಿಕ ಪ್ರಕ್ರಿಯೆಗೆ ಮಾತ್ರವೇ ತಡೆ ನೀಡಲಾಗಿದೆ. ಹೀಗಾಗಿ, ಪ್ರಜ್ವಲ್ ವಿರುದ್ಧದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು.
ಇದೇ ವೇಳೆ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗೆ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇಂತಹುದೇ ಇನ್ನೊಂದು ಪ್ರಕರಣದಲ್ಲಿ ವಿಚಾರಣೆ ಈಗಾಗಲೇ ಬಹುತೇಕ ಮುಕ್ತಾಯಗೊಂಡಿದೆ. ಆ ಪ್ರಕರಣ ಮುಗಿದ ತಕ್ಷಣ ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಮುಂದಿನ ವಾರ ಅಥವಾ 15 ದಿನಗಳಲ್ಲಿ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದನ್ನು ಅಲ್ಲಗಳೆದ ಪ್ರಜ್ವಲ್ ಪರ ವಕೀಲ ಪ್ರಭುಲಿಂಗ ಕೆ.ನಾವದಗಿ, ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. 157 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ಮೊದಲ ಜಾಮೀನು ಅರ್ಜಿ ತಿರಸ್ಕೃತವಾದ ದಿನದಿಂದ ಈವರೆಗೆ ವಿಚಾರಣೆ ಒಂದಿಷ್ಟೂ ಮುಂದೆ ಹೋಗಿಲ್ಲ. ಇದರಿಂದ ಪ್ರಜ್ವಲ್ ಜೈಲಿನಲ್ಲಿ ಕೊಳೆಯುವಂತೆ ಮಾಡಲಾಗಿದೆ ಎಂದರು. ನಂತರ ವಿಚಾರಣೆಯನ್ನು ಜೂನ್ 24ಕ್ಕೆ ಮುಂದೂಡಲಾಯಿತು.
ಈ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರಿಗೆ ಈಗಾಗಲೇ ಜಾಮೀನು ದೊರೆತಿದ್ದು, ಅವರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. ಇದೇ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.