ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ನಿರ್ಮಿಸಿರುವ ಧಾತ್ರಿ ಮಂಗಲ ಭವನ ಹಾಗೂ ಉತ್ಕರ್ಷ ಪೊಲೀಸ್ ನಿವಾಸ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯ ಇದಗಿಸುವಲ್ಲಿ ಕರ್ನಾಟಕ ಮದಲ ಸ್ಥಾನದಲ್ಲಿದೆ ಎಂದು ಹೈದರಾಬಾದ್ನ ಸಂಸ್ಥೆಯೊಂದು ಅಧ್ಯಯನ ಮಾಡಿ ತಿಳಿಸಿದೆ ಎಂದರು.
ಜಿಲ್ಲೆಯ ಪ್ರತಿಯೊಂದು ತಾಲ್ಲೂಕು ಕೇಂದ್ರದಲ್ಲಿ ಒಟ್ಟು 10 ಸಾವಿರ ಮನೆಗಳ ಪೊಲೀಸ್ ವಸತಿ ಗೃಹ ನಿರ್ಮಾಣ ಮಾಡಲಾಗುತ್ತಿದೆ. ಶೇ40ರಷ್ಟು ಪೊಲೀಸರಿಗೆ ವಸತಿ ಸೌಲಭ್ಯ ದೊರೆತಿದೆ. ಮುಖ್ಯಮಂತ್ರಿಗಳು ಮತ್ತಷ್ಟು ಮನೆಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ.400 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದರು.
ಈ ಹಿಂದೆ ಆರೋಗ್ಯ ತಪಾಸಣೆಗೆ ನೀಡಲಾಗುತ್ತಿದ್ದ ರೂ.1 ಸಾವಿರವನ್ನು ರೂ.1,500ಕ್ಕೆ ಹೆಚ್ಚಿಸಲಾಗಿದೆ. ಇಡೀ ರಾಜ್ಯದಲ್ಲಿ ಕೊಲೆ, ಅತ್ಯಾಚಾರ ಸೇರಿದಂತೆ ಅಪರಾಧ ಪ್ರಕರಣಗಳು ಇಳಿಮುಖವಾಗುತ್ತಿವೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲೆದೆ ಎನ್ನುವುದು ತಿಳಿದು ಬರುತ್ತದೆ. ಹಾಗೆಂದು ಅಪರಾಧಗಳು ನಡೆಯುತ್ತಿಲ್ಲ ಎಂದಲ್ಲ, ಕಡಿಮೆಯಾಗುತ್ತಿವೆ. ಅವುಗಳ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಲಾಗಿದೆ ಎಂದರು.
ಪ್ರತಿ ಜಿಲ್ಲೆಗೂ ಸಿಇಎನ್ ಪೊಲೀಸ್ ಠಾಣೆ ತೆರೆದ ದೇಶದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಪೊಲೀಸ್ ಠಾಣೆಗಳ ಆಧುನೀಕರಣ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಜತೆಗೆ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಶಾಸಕ ಭೀಮಸೇನ ಚಿಮ್ಮನಕಟ್ಟಿ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಸಭಾಪತಿ ಯಲ್ಲಪ್ಪ ನಾರಾಯಣಿ, ಐಜಿಪಿ ಚೇತನಸಿಂಗ್ ರಾಠೋಡ, ಜಿಲ್ಲಾಧಿಕಾರಿ ಸಂಗಪ್ಪ ಎಂ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠ ಅಮರನಾಥ ರೆಡ್ಡಿ ಇದ್ದರು.