ನವದೆಹಲಿ: ಬಿಜೆಪಿ ನೇತೃತ್ವದ ಅಧಿಕಾರಾವಧಿಯಲ್ಲಿ ಕಳೆದ 11 ವರ್ಷಗಳಿಂದ ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಮ್ಮಿಕೊಂಡಿದ್ದ ‘ಸಂವಿಧಾನ ಬಚಾವೋ ಯಾತ್ರೆ’ಯಿಂದ ಕಂಗೆಟ್ಟಿದ್ದ ಬಿಜೆಪಿ ಮುಖಂಡರು 50 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯ ಬಗ್ಗೆ ಈಗಲೂ ಮಾತನಾಡತೊಡಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ಕೊಡುಗೆ ನೀಡದವರು ಈಗ ಸಂವಿಧಾನ ರಚನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶಕ್ಕೆ ಯಾವುದೇ ಗಮನಾರ್ಹ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ನಿರುದ್ಯೋಗ, ಹಣದುಬ್ಬರ, ನೋಟು ಅಮಾನ್ಯೀಕರಣದಂತಹ ಸಮಸ್ಯೆಗಳ ಬಗ್ಗೆ ಉತ್ತರ ನೀಡಲಾಗದವರು ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೇ ಸುಳ್ಳುಗಳನ್ನು ಹೇಳಿ ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ತುರ್ತು ಪರಿಸ್ಥಿತಿಯ 50ನೇ ವರ್ಷವನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸುವಂತೆ ಎಲ್ಲ ರಾಜ್ಯಗಳಿಗೂ ಪ್ರಧಾನಿ ಮೋದಿ ಸುತ್ತೋಲೆ ಹೊರಡಿಸಿದ್ದಾರೆ. ಈಗ ಸಂವಿಧಾನ ಉಳಿಸುವ ಬಗ್ಗೆ ಮಾತನಾಡುತ್ತಿರುವವರು ಮುಗಿದು ಹೋಗಿರುವ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನವನ್ನು ಹಾಳು ಮಾಡುತ್ತಿರುವವರೇ ಇವರು ಎಂದು ಖರ್ಗೆ ಕಿಡಿಕಾರಿದರು.