ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಿಂದ ಹಿಂತಿರುಗುತ್ತಿದ್ದಂತೆ ವಸತಿ ಸಚಿವ ಜಮೀರ್ ಅಹಮದ್ಖಾನ್ ಮತ್ತು ಶಾಸಕ ರಾಜು ಕಾಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಿ.ಆರ್. ಪಾಟೀಲ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಇವರಿಬ್ಬರೂ ಶಾಸಕರು ಸೇರಿದಂತೆ ಹಲವಾರು ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್ ಸೂಚನೆಯಂತೆ ಸಿಎಂ, ಡಿಸಿಎಂ ಇಬ್ಬರೂ ಅಸಮಾಧಾನಗೊಂಡಿರುವ ಶಾಸಕರನ್ನು ಭೇಟಿ ಮಾಡಿ ಸಮಾಧಾನ ಮಾಡುವ ಪ್ರಯತ್ನ ನಡೆಸಿದ್ದಾರೆ.
ಮನೆಗಳನ್ನು ಹಂಚಲು ವಸತಿ ಇಲಾಖೆಯಲ್ಲಿ ಲಂಚ ಕೊಡಬೇಕಾಗಿದೆ ಎಂಬ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ಶಾಸಕ ಬಿ.ಆರ್. ಪಾಟೀಲ್ ಮಾಡಿದ್ದ ಆರೋಪಗಳನ್ನು ಕುರಿತು ಜಮೀರ್ ಅಹಮದ್ ಖಾನ್ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ನಡೆಸಿದರು. ಪಾಟೀಲ್ ಅವರು ಮಾಡಿದ್ದ ಆರೋಪಗಳ ಬಗ್ಗೆ ಜಮೀರ್ ಅವರಿಂದ ಮುಖ್ಯಮಂತ್ರಿ ವಿವರಣೆ ಪಡೆದರು ಎಂದೂ ತಿಳಿದು ಬಂದಿದೆ.
ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಆರೋಪ ಮಾಡಿದ್ದ ರಾಜು ಕಾಗೆ ಅವರೂ ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ನಿನ್ನೆಯಷ್ಟೇ ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಶಾಸಕರ ಅಸಮಾಧಾನ ಮತ್ತು ಬಹಿರಂಗ ಹೇಳಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಶಾಸಕರ ಜತೆ ಚರ್ಚಿಸಿ, ಗೊಂದಲಗಳನ್ನು ಪರಿಹರಿಸುವಂತೆ ಮುಖ್ಯಮಂತ್ರಿಗೆ ಸೂಚನೆ ನೀಡಿದ್ದರು. ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿಗಳು ಅತೃಪ್ತ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ.