ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕಿಂಗ್, ಗಣಿಗಾರಿಕೆ, ಹೆದ್ದಾರಿ ವಿಮೆ, ಅಂಚೆ ಕಲ್ಲಿದ್ದಲು ಗಣಿಗಾರಿಕೆ ಹೆದ್ದಾರಿ ಹಾಗೂ ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳೆ ಬುಧವಾರ ಸಾರ್ವತ್ರಿಕ ಮುಷ್ಕರ ನಡೆಸಲಿದ್ದಾರೆ. ಇದರಿಂದ ವಿವಿಧ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಹಾಗೂ ದೇಶ ವಿರೋಧಿ ಮತ್ತು ಕಾರ್ಪೊರೇಟ್ ಪರವಾದ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ವಿವಿಧ ಕಾರ್ಮಿಕರ ಸಂಘಟನೆಗಳು ಮತ್ತು ಅವುಗಳ ಸಹವರ್ತಿ ಸಂಘಟನೆಗಳ ವೇದಿಕೆ ಭಾರತ್ ಬಂದ್ ಗೆ ಕರೆ ನೀಡಿದೆ.
ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸುವಂತೆ ವೇದಿಕೆ ಕರೆ ನೀಡಿದೆ. ಸಂಘಟಿತ ಹಾಗೂ ಅಸಂಘಟಿತ ವಲಯಗಳಲ್ಲಿ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಸಿದ್ಧತೆ ನಡೆಸಿವೆ ಎಂದು ತಿಳಿದು ಬಂದಿದೆ.
ಮುಷ್ಕರದಲ್ಲಿ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿಯಾಗುವ ನಿರೀಕ್ಷೆ ಇದ್ದು, ರೈತರು ಹಾಗೂ ಗ್ರಾಮೀಣ ಪ್ರದೇಶಗಳ ಕಾರ್ಮಿಕರೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮುಖಂಡ ಅಮರ್ ಜಿತ್ ಕೌರ್ ಹೇಳಿದ್ದಾರೆ.
ಕಾರ್ಮಿಕ ಸಂಘಟನೆಗಳು ಕಳೆದ ವರ್ಷ 17 ಬೇಡಿಕೆಗಳ ಪಟ್ಟಿಯನ್ನು ಕೇಂದ್ರ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯ ಅವರಿಗೆ ಸಲ್ಲಿಸಿತ್ತು.ಆದರೆ ಯಾವುದೇ ಬೇಡಕೆಯನ್ನು ಸರ್ಕಾರ ಈಡೇರಿಸಿಲ್ಲ.
ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ನಿರುದ್ಯೋಗಕ್ಕೆ ಕಾರಣವಾಗಿವೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ, ವೇತನ ಇಳಿಕೆಗೆ, ಸಾಮಾಜಿಕ ವಲಯಗಳ ಮೇಲಿನ ವೆಚ್ಚ ಇಳಿಕೆಗೆ ಕಾರಣವಾಗುತ್ತಿವೆ. ಇವೆಲ್ಲವೂ ಅಸಮಾನತೆಯನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ಕೇಂದ್ರ ಸರ್ಕಾರವು ವಾರ್ಷಿಕ ಕಾರ್ಮಿಕ ಸಮಾವೇಶವನ್ನು 10 ವರ್ಷಗಳಿಂದ ಆಯೋಜಿಸಿಲ್ಲ. ಕಾರ್ಮಿಕ ವರ್ಗದ ಹಿತಕ್ಕೆ ವಿರುದ್ಧವಾದ ತೀರ್ಮಾನ ಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.