ರಾಜ್ಯ ನೀರಾವರಿ ಯೋಜನೆಗಳು: ಕೇಂದ್ರದ ನೆರವಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಮನವಿ

Most read

ನವದೆಹಲಿ: ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಿಸಲು ರಾಜ್ಯಸರ್ಕಾರ ಕೆಲಸ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್‌, ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ್‌, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಷಿ, ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಳಸಾ ಬಂಡೂರಿ, ಮೇಕೆದಾಟು, ಕೃಷ್ಣಾ ನ್ಯಾಯಾಧಿಕರಣದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದ್ದು, 11 ಸಾವಿರ ಕೋಟಿ ರೂ. ಮೊತ್ತದ ಹೊಸ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಎತ್ತಿನಹೊಳೆ ಯೋಜನೆಯಡಿ ತುಮಕೂರು, ಹಾಸನದಲ್ಲಿ ಕಾಮಗಾರಿ ನಡೆಯುತ್ತಿದೆ. ಕಂದಾಯ ಇಲಾಖೆಯಿಂದ 40 ವರ್ಷಗಳ ಹಿಂದೆ ಮಂಜೂರಾಗಿದ್ದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಿ ಕೆಲಸ ಮುಂದುವರೆಸುವ ಹಂತದಲ್ಲಿ ಅರಣ್ಯ ಇಲಾಖೆ ತಮ ಭೂಮಿ ಎಂದು ಹಕ್ಕು ಪ್ರತಿಪಾದಿಸಿದೆ. ತಕರಾರು ಮುಂದುವರೆಯುವುದು ಬೇಡ ಎಂಬ ಕಾರಣಕ್ಕೆ ಪರ್ಯಾಯ ಭೂಮಿಯಡಿ ಸೌಹಾರ್ದಯುತ ಇತ್ಯರ್ಥಕ್ಕೆ ಪ್ರಯತ್ನನಡೆಸಿದ್ದೇವೆ. ಅದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡುತ್ತಿಲ್ಲ. ಸಣ್ಣಪುಟ್ಟ ತಕರಾರುಗಳನ್ನು ತೆಗೆದು ಅಡ್ಡಿಪಡಿಸುತ್ತಿದೆ ಎಂದು ಆಪಾದಿಸಿದರು.

ಕಳಸಾ ಬಂಡೂರಿ ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು ಹಿಂದಿನ ಬಿಜೆಪಿ ಸರ್ಕಾರದಲ್ಲೇ ಹೇಳಲಾಗಿತ್ತು. ಟೆಂಡರ್‌ ಕೂಡ ಕರೆಯಲಾಗಿತ್ತು. ಈ ನಡುವೆ ಗೋವಾ ಸರ್ಕಾರ 2023ರ ಜನವರಿ 9 ರಂದು ಕರ್ನಾಟಕಕ್ಕೆ ಶೋಕಾಸ್‌‍ ನೋಟಿಸ್‌‍ ನೀಡಿತ್ತು.  ರಾಜ್ಯ ಸರ್ಕಾರ ಉತ್ತರ ನೀಡಿದೆ. ನಮ್ಮ ತಪ್ಪುಗಳಿದ್ದರೆ ಕೇಂದ್ರ ಸರ್ಕಾರ ಮಾರ್ಗದರ್ಶನ ಮಾಡಬಹುದು. ಒಂದು ರಾಜ್ಯ ಮತ್ತೊಂದು ರಾಜ್ಯಕ್ಕೆ ಶೋಕಾಸ್‌‍ ನೋಟಿಸ್‌‍ ನೀಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ನಮಗೆ ನೋಟೀಸ್‌‍ ನೀಡಲು ಗೋವಾ ರಾಜ್ಯಕ್ಕೆ ಯಾವ ಹಕ್ಕಿದೆ ಎಂದು ಪ್ರಶ್ನಿಸಿದರು.

ನೋಟೀಸ್‌‍ ವಿರೋಧಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದೇವೆ. ಈಗ ಆ ಪ್ರಕರಣವನ್ನು ಹಿಂಪಡೆದು ಕಳಸಾ ಬಂಡೂರಿ ಅಣೆಕಟ್ಟು ಕೆಲಸವನ್ನು ಪ್ರಾರಂಭ ಮಾಡುತ್ತಿದ್ದೇವೆ. ಈ ಕಾರಣಕ್ಕೆ ಕಾನೂನು ತಜ್ಞರಿಂದ ಅಭಿಪ್ರಾಯವನ್ನು ಕೇಳಲಾಗಿದೆ. ವಾರದೊಳಗೆ ವರದಿ ಬರಲಿದೆ ಎಂದು ಹೇಳಿದರು.

ಈ ಯೋಜನೆಯನ್ನು ಕುಡಿಯುವ ನೀರಿನ ಆದ್ಯತೆ ಮೇರೆಗೆ ಪರಿಗಣಿಸಿ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಅಪ್ರೈಸಲ್‌ ವರದಿ ನೀಡಬೇಕಿದೆ. ಮೇಕೆದಾಟು ಯೋಜನೆಯಿಂದ 7 ಜಿಲ್ಲೆ, 29 ತಾಲ್ಲೂಕು, 6,657 ಹಳ್ಳಿ, 38 ನಗರ ಪ್ರದೇಶ ಸೇರಿ 75 ಲಕ್ಷ ಜನಸಂಖ್ಯೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕೃಷ್ಣಾ ನ್ಯಾಯಾಧಿಕರಣದ ತೀರ್ಪು ಪ್ರಕಟಗೊಂಡು ಹತ್ತು ವರ್ಷಗಳಾಗಿವೆ. ಈವರೆಗೂ ಅಧಿಸೂಚನೆ ಇಲ್ಲದೆ ನನೆಗುದಿಗೆ ಬಿದ್ದಿದೆ. 1.40 ಲಕ್ಷ ಎಕರೆಗೆ ನೀರಾವರಿ ಕಲ್ಪಿಸಲು ರಾಜ್ಯಸರ್ಕಾರ ಯೋಜನೆಗಳನ್ನು ಆರಂಭಿಸಿದೆ. ನಮ್ಮ ನೀರು ನಮ್ಮ ಹಕ್ಕು. ಹೀಗಾಗಿ ಕೆಲಸ ಆರಂಭಿಸುತ್ತೇವೆ. ಕೇಂದ್ರ ಸರ್ಕಾರ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರದ ಜತೆ ಚರ್ಚೆ ನಡೆಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಕೇಂದ್ರ ಬಜೆಟ್‌ನಲ್ಲಿ ಭರವಸೆ ನೀಡಿದಂತೆ 5,400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು. ಕೇಂದ್ರ ಸಚಿವರು ಭಾಗಶಃ ಹಣ ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರ ಕೇಳಿರುವ ಎಲ್ಲಾ ದಾಖಲೆಗಳನ್ನು ನಾವು ಒದಗಿಸಿದ್ದೇವೆ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಎರಡನೇ ಹಂತ, ತುಂಗಭದ್ರಾ, ಮಲಪ್ರಭಾ, ನಾರಾಯಣ ಅಣೆಕಟ್ಟು ಸೇರಿದಂತೆ 6 ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದ್ದು, 11 ಸಾವಿರ ಕೋಟಿ ರೂ.ಗಳ ಅನುದಾನಕ್ಕೆ ಮನವಿ ಮಾಡಲಾಗಿದೆ. ಮೇಕೆದಾಟು ಯೋಜನೆಗೂ ಶೇ.25 ರಷ್ಟು ಆರ್ಥಿಕ ನೆರವು ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಡಿಕೆ ಸಶಿವಕುಮಾರ್‌ ತಿಳಿಸಿದರು.

More articles

Latest article