ಚಾಮರಾಜನಗರ: ರಾಜ್ಯಾದ್ಯಂತ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ನಡೆದಿದ್ದು, ಮನೋಜ್ ಕುಮಾರ್ (10) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ ಬಾಲಕ.
ಹೃದಯಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದ ಮನೋಜ್ ಗೆ ಶಾಲೆಯಲ್ಲಿ ಪಾಠ ಕೇಳುವಾಗ ಹೃದಯಾಘಾತವಾಗಿದೆ. ತಕ್ಷಣ ಮನೋಜ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆ ಮನೋಜ್ ಕುಮಾರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.
ಮನೋಜ್ ಗೆ ಹೃದಯ ಸಂಬಂಧಿ ಕಾಯಿಲೆ ಇದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಗುಂಡ್ಲುಪೇಟೆ ತಾಲೂಕಿನ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ಎಂಬುವರ ಪುತ್ರ ಮನೋಜ್ ಕುಮಾರ್. ಮೃತನ ತಂದೆ ಮೃತಪಟ್ಟಿದ್ದು ಆತನ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.