ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು ಮಂದಿ ಇದ್ದಾರೆ. ಸಿದ್ದರಾಮಯ್ಯ ಹಾಲಿ ಮುಖ್ಯಮಂತ್ರಿ ಆಗಿರುವ ಕಾರಣ ಅವರನ್ನೂ ಸೇರಿಸಿಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಕೆಲ ಸ್ವಾಮೀಜಿ ಪ್ರತಿಪಾದಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿ ಆಗಬೇಕೆಂದು ಹಿತೈಶಿಗಳು ಹೇಳಬಹುದು. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಲ್ಲ ಎಂದ ಅವರು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರನ್ನೇ ಕೇಳಬೇಕು ಎಂದರು.
ಕಾಂಗ್ರೆಸ್ ಮುಖಂಡರ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ಕುರಿತು, ಇ.ಡಿಯವರು ರಾಜಕೀಯ ದುರುದ್ದೇಶದಿಂದ ವಿಪಕ್ಷಗಳ ಮುಖಂಡರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಮುಖಂಡರನ್ನೇ ಗುರಿ ಮಾಡಿಕೊಂಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇದು ಬಿಜೆಪಿಗೆ ಶೋಭೆ ತರುವುದಿಲ್ಲ. ಈ ರೀತಿ ಮಾಡಬೇಡಿ ಎಂದು ಹಲವಾರು ಬಾರಿ ಮನವಿ ಮಾಡಿದ್ದೇನೆ. ಈಗಲೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.