ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ. 10ರಷ್ಟು ಮೊತ್ತವನ್ನು ಬಳಕೆ ಮಾಡುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ದೊರೆತಿದೆ. ಆದರೆ ರಾಜ್ಯಪಾಲರು ಅಂಗೀಕಾರ ನೀಡದೆ ಆ ಬಗ್ಗೆ ಅಸಡ್ಡೆ ಹೊಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯೋಜಿಸಿದ್ದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ಮಸೂದೆಗೆ ರಾಜ್ಯಪಾಲರು ಸಹಿ ಮಾಡಿದ್ದರೆ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಅಲ್ಲಿ ಕೆಲಸ ಮಾಡುತ್ತಿರುವವರ ಜೀವನ ಮಟ್ಟ ಸುಧಾರಣೆಗೆ ಅನುಕೂಲ ಆಗುತ್ತಿತ್ತು. ಆದರೆ ಅವರು ಅದನ್ನು ಅನಗತ್ಯವಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ ಎಂದು ಹೇಳಿದರು.
ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದೇವಸ್ಥಾನಗಳ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗುವ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಅನ್ಯಧರ್ಮದ ಅಭಿವೃದ್ಧಿಗೆ ಬಳಸುತ್ತಿದೆ ಎಂಬ ಆರೋಪದ ಕುರಿತು ಸಭೆಯಲ್ಲಿ ಗಂಭೀರ ಚರ್ಚೆಯಾಗಿತ್ತು. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರು ಹಿಂದೂ ವಿರೋಧಿಗಳು ಎಂಬ ಆರೋಪವೂ ಆಗಾಗ ಕೇಳಬರುತ್ತಿದೆ. ಆದರೆ ದೇವಸ್ಥಾನಗಳಲ್ಲಿ ಅರ್ಚಕರಿಗೆ ತಸ್ತೀಕ್ ನೀಡುವ ಪದ್ಧತಿಯನ್ನು ಆರಂಭಿಸಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಮೂರು ಬಾರಿ ತಸ್ತೀಕ್ ಮೊತ್ತ ಹೆಚ್ಚಳ ಮಾಡಿರುವುದೂ ಸಿದ್ದರಾಮಯ್ಯ ಸರ್ಕಾರ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ ಹಿಂದು ದೇವಸ್ಥಾನಗಳ ಹಣ ಅನ್ಯಧರ್ಮದ ಏಳಿಗೆಗಾಗಿ ಬಳಸಲಾಗುತ್ತಿದೆ ಎಂಬ ಸುಳ್ಳು ಆರೋಪ ಆಗಾಗ ಕೇಳಿಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಹಣ ದುರುಪಯೋಗ ಆಗುತ್ತಿಲ್ಲ ಎಂಬ ಮಾಹಿತಿ ಇರುವ ಫಲಕವನ್ನು ದೇವಸ್ಥಾನಗಳ ಎದುರು ಅಳವಡಿಸಬೇಕು ಎಂದು ಸಲಹೆ ನೀಡಿದರು.
ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ರಾಘವ ನಾಳ ಮಾತನಾಡಿ, ಹುಂಡಿ ಹಣ ಸರ್ಕಾರಕ್ಕೆ ಹೋಗುತ್ತಿಲ್ಲ. ಹಿಂದೂ ದೇವಾಲಯಗಳ ಹಣವನ್ನು ಅನ್ಯ ಧರ್ಮದವರಿಗೆ ಕೊಡಲಾಗುತ್ತಿದೆ ಎಂದು ರಾಷ್ಟ್ರಮಟ್ಟದಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಮಾಧ್ಯಮಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದು ವ್ಯವಸ್ಥಾಪನಾ ಸಮಿತಿಯ ಸದಸ್ಯರೊಬ್ಬರು ತಿಳಿಸಿದರು.