ರಾಜ್ಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಡುಗೆ ಶೂನ್ಯ: ಕಾಂಗ್ರೆಸ್‌ ಮುಖಂಡ ರಮೇಶ್‌ ಬಾಬು ಟೀಕೆ

Most read

ಬೆಂಗಳೂರು:  ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ರಾಜ್ಯದ ಪರವಾಗಿ ಒಂದು ದಿನವೂ ಧ್ವನಿ ಎತ್ತಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಆರೋಪಿಸಿದ್ದಾರೆ.

2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕಾರ್ಮಿಕ ಇಲಾಖೆಗೆ 32,646 ಕೋಟಿ ಅನುದಾನ ಹಂಚಿಕೆಯಾಗಿದೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಶೋಭಾ ಕರಂದ್ಲಾಜೆ ಅವರು ಯಾವ ವಿಶೇಷ ಯೋಜನೆ ತಂದಿದ್ದಾರೆ? ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಕಾರ್ಮಿಕ ಸಚಿವರಾಗಿದ್ದಾಗ ಇಎಸ್ಐ ಆಸ್ಪತ್ರೆ, ರೈಲ್ವೇ ಯೋಜನೆಗಳು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಆರ್ಟಿಕಲ್ 371 ಜೆ ಜಾರಿಗೊಳಿಸಿದರು. ಶೋಭಾ ಕರಂದ್ಲಾಜೆ  ಅವರು ಇಂತಹ ಯಾವ ಯೋಜನೆಯನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಪ್ರಶ್ನಿಸಿದರು.

2021ರಿಂದ 2023ರ ಅವಧಿಯಲ್ಲೂ ಶೋಭಾ ಕರಂದ್ಲಾಜೆ ಅವರು ಕೃಷಿ ಇಲಾಖೆ ರಾಜ್ಯ ಸಚಿವರಾಗಿ 2023-2024ರಲ್ಲಿ ಆಹಾರ ಇಲಾಖೆ ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದು, ಆಗಲೂ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡಿಲ್ಲ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪತ್ರ ಬೆರೆಯುವುದು, ಧಾರ್ಮಿಕ ವಿಚಾರವಾಗಿ ಮಾತನಾಡುವುದು ಬಿಟ್ಟರೆ ರಾಜ್ಯದ ಅಭಿವೃದ್ಧಿ ಹಾಗೂ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾರ್ಮಿಕ ಸಚಿವರಾಗಿರುವ ಸಂತೋಷ್ ಲಾಡ್ ಅವರು ಅನೇಕ ಯೋಜನೆಗಳ ಮೂಲಕ ಕಾರ್ಮಿಕರ ಬದುಕನ್ನು ಹಸನು ಮಾಡುವ ಕೆಲಸ ಮಾಡುತ್ತಿದ್ದು, ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ಸಿಕ್ಕರೆ ರಾಜ್ಯದ ಕಾರ್ಮಿಕರ ಕಲ್ಯಾಣಕ್ಕೆ ಅನುಕೂಲವಾಗುತ್ತದೆ. ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವೈಫಲ್ಯವನ್ನು ಜನರ ಮುಂದೆ ತೆರೆದಿಡುತ್ತಿದ್ದು, ಇದೇ ರೀತಿ ಮುಂದಿನ ದಿನಗಳಲ್ಲಿ ಇತರೆ ಕೇಂದ್ರ ಸಚಿವರ ವೈಫಲ್ಯಗಳನ್ನು ಬಹಿರಂಗಪಡಿಸುತ್ತೇವೆ ಎಂದರು.

ಕೆಪಿಸಿಸಿ ಕಾನೂನು ಘಟಕದಿಂದ ಆಗಸ್ಟ್ 1 ಹಾಗೂ ಎರಡರಂದು ದಿಲ್ಲಿ ಚಲೋ ಹಾಗೂ ಕಾನೂನು ಸಮಾವೇಶ ನಡೆಯುತ್ತಿದೆ. ರಾಜ್ಯದಿಂದ ಸುಮಾರು 250 ಜನ ಭಾಗವಹಿಸುತ್ತಿದ್ದೇವೆ. ಆಗಸ್ಟ್ 1ರಂದು ದೆಹಲಿಯ ಜಂತರ್ ಮಂಥರ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ಕರ್ನಾಟಕದ ಪರವಾಗಿ ಧ್ವನಿ ಎತ್ತಿ ಎಂದು ಕರ್ನಾಟಕದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರಿಗೆ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದು ರಮೇಶ್‌ ಬಾಬು ಹೇಳಿದರು

More articles

Latest article