ನವದೆಹಲಿ: ಈ ಭೂಮಿ ಮೇಲಿರುವ ಎಲ್ಲ ವಿಚಾರಗಳನ್ನು ಕುರಿತು ಸದನದಲ್ಲಿ ಚರ್ಚೆ ನಡೆಸಬಹುದು. ಹಾಗಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ನೀಡಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉಪ ಸಭಾಪತಿ ಹರಿವಂಶ್ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.
ಸಂಸತ್ತಿನಲ್ಲಿ ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿ ಈ ಹಿಂದೆ ನಡೆದ ಚರ್ಚೆಗಳು, ಮಾಜಿ ಸಭಾಪತಿ ಜಗದೀಪ್ ಧನಕರ್ ಅವರ ಆದೇಶಗಳನ್ನು ಉಲ್ಲೇಖಿಸಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಚರ್ಚೆಯು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಭೂಮಿ ಮೇಲಿರುವ ಎಲ್ಲ ವಿಚಾರಗಳನ್ನು ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬಹುದು. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ವಾಗ್ದಂಡನೆ ವಿಚಾರದಲ್ಲಿ ಮಾತ್ರ ಚರ್ಚೆ ಸಾಧ್ಯವಿಲ್ಲ. ಉಳಿದ ಎಲ್ಲ ವಿಷಯಗಳನ್ನು ಕುರಿತು ಚರ್ಚೆ ನಡೆಸಬಹುದು ಎಂದು ರಾಜ್ಯಸಭೆಯ ಸಭಾಪತಿಯಾಗಿದ್ದ ಜಗದೀಪ್ ಧನಕರ್ ಅವರು 2023ರ ಜುಲೈ 21ರಂದು ಆದೇಶ ನೀಡಿದ್ದರು ಎಂದು ಖರ್ಗೆ ಅವರು ಪತ್ರದಲ್ಲಿ ನೆನಪಿಸಿದ್ದಾರೆ.