ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ನಡೆಸಿರುವ ಭೂ ಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳನ್ನು ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಲೇಖಕ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಮತ್ತು ಹಲವಾರು ಸಾಮಾಜಿಕ ಕಾರ್ಯಕರ್ತರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ ಸೋಮನಾಥ ನಾಯಕ್ ಅವರು ಮಂಜುನಾಥಸ್ವಾಮಿ ಮತ್ತು ಅಣ್ಣಪ್ಪಸ್ವಾಮಿ ದೇವಸ್ಥಾನಗಳಿಗೆ ಸಾಂಪ್ರದಾಯಿಕವಾಗಿ ಸೇರಿದ 1,050 ಎಕರೆಗೂ ಹೆಚ್ಚು ಭೂಮಿಯನ್ನು ದೇವಸ್ಥಾನದ ಅಧಿಕಾರಿಗಳು ಕಾನೂನುಬಾಹಿರವಾಗಿ ಸುಳ್ಳು ಘೋಷಣೆಗಳ ಮೂಲಕ ಖಾಸಗಿ ಆಸ್ತಿ ಎಂದು ಘೋಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೇವಸ್ಥಾನದ ಆಡಳಿತ ಮಂಡಳಿಗೆ ಸೇರಿದ ವ್ಯಕ್ತಿಯೊಬ್ಬ ತಾನು ಬಡವ ಎಂದು ಸುಳ್ಳು ದಾಖಲೆಗಳನ್ನು ನೀಡಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪಡೆದುಕೊಂಡಿರುತ್ತಾರೆ. ಜತೆಗೆ ಇವರು ಸಾರ್ವಜನಿಕ ಯೋಜನೆಗಳಿಗೆ ಮೀಸಲಾದ ಜಮೀನನ್ನು ವಾಣಿಜ್ಯ ಆಸ್ತಿಯನ್ನಾಗಿ ಪರಿವರ್ತಿಸಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದೂ ಅವರು ದೂರಿದ್ದಾರೆ.
ಈ ಅಕ್ರಮಗಳನ್ನು ಕುರಿತು ಸೂಕ್ತ ಮತ್ತು ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರು ಈ ಹಿಂದೆ ನಿರ್ದೇಶನ ನೀಡಿದ್ದರೂ, ಯಾವುದೇ ತನಿಖೆ ಕೈಗೊಂಡಿಲ್ಲ ಎಂದೂ ನಾಯಕ್ ಅವರು ಆಪಾದಿಸಿದ್ದಾರೆ.
ಸೂಕ್ತ ಕ್ರಮಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪೂರಕ ದಾಖಲೆಗಳೊಂದಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.