ಬೆಂಗಳೂರು: ಖ್ಯಾತ ರಂಗ ಕಲಾವಿದ, ನಿರ್ದೆಶಕ ಯಶವಂತ ಸರದೇಶಪಾಂಡೆ ನಿಧನಹೊಂದಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ಅಸು ನೀಗಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ 1965 ರಲ್ಲಿ ಜನಿಸಿದರು. ಇವರು ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವಿ ಪಡೆದು ನಂತರ ನ್ಯೂಯಾರ್ಕ್ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನ ಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದಾರೆ.
ಆಲ್ ದಿ ಬೆಸ್ಟ್, ರಾಶಿ ಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್ ಮೊದಲಾದ ಹಾಸ್ಯ ನಾಟಕಗಳು ಅಸಂಖ್ಯಾತ ಪ್ರೇಕ್ಷರನ್ನು ನಕ್ಕು ನಲಿಸಿವೆ.
ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಮೊದಲಾದ ಧಾರಾವಾಹಿಗಳಲ್ಲಿ ನಟಿಸುವುದರ ಜತೆಗೆ ಸಂಭಾಷಣೆ ಬರೆದಿದ್ದಾರೆ. ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಮೊದಲಾದ ಚಲನಚಿತ್ರಗಳಲ್ಲೂ ಅಭಿನಯಿಸಿ ಸೈ ಅನ್ನಿಸಿಕೊಂಡಿದ್ದಾರೆ.
ಅಂಧಯುಗ, ಇನ್ಸ್ಪೆಕ್ಟರ್ ಜನರಲ್, ಮಿಡ್ ಸಮರ್ ನೈಟ್ಸ್ ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ ಹೆಮ್ಮೆ ಇವರದ್ದು. ಅವರ ಪತ್ನಿ ಮಾಲತಿ ಸರದೇಶಪಾಂಡೆ ಅವರೂ ಕಲಾವಿದೆಯಾಗದ್ದು, ಹಲವಾರು ನಾಟಕ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದಾರೆ.