ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Most read

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ  ಮತಯಂತ್ರಗಳ (ಇವಿಎಂ) ಬದಲಿಗೆ ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಮತಗಳ್ಳತನ ವಿರುದ್ಧ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ  ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿ ಸಹಿತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ.

ಮತ ಕಳ್ಳತನ ತಡೆದು ಪ್ರಜಾಪ್ರಭುತ್ವ ಉಳಿಸಲು ಕರ್ನಾಟಕದಿಂದ ಧ್ವನಿ ಎತ್ತಿರುವ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಪಕ್ಷ ಸೇರಿದಂತೆ ಎಲ್ಲಾ ಸಾರ್ವಜನಿಕರು ಪಕ್ಷಬೇಧ ಮರೆತು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ. ಮತದಾನದ ಹಕ್ಕಿನ ರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಕೂಡ ಪಾಲ್ಗೊಂಡಿದ್ದೇವೆ. ವೋಟ್‌ ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ ಇದುವರೆಗೆ 1,12,41,000 ಮತದಾರರು ಸಹಿ ಮಾಡಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಸಹಿ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳನ್ನು 10ನೇ ತಾರೀಖಿನಂದು ದೆಹಲಿಯ ಎಐಸಿಸಿ ಕಚೇರಿಗೆ ತೆಗೆದುಕೊಂಡು ಹೋಗಿ ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.

ಮತಗಳ್ಳತನ ವಿರುದ್ಧ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

“ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ಈ ಸಹಿ ಸಂಗ್ರಹದ ಅರ್ಜಿಗಳನ್ನು ಇದೇ ತಿಂಗಳು 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿರುವ ಜಿಲ್ಲಾಧ್ಯಕ್ಷರ ಜೊತೆ ವಿಮಾನದಲ್ಲಿ ಈ ಸಹಿ ಸಂಗ್ರಹಿಸಿರುವ ಅರ್ಜಿಗಳನ್ನು ದೆಹಲಿಗೆ ತಲುಪಿಸಲಾಗುವುದು. ನವೆಂಬರ್ ಮೂರನೇ ವಾರದಲ್ಲಿ (ನ.25) ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಮಾಡಲು ಚಿಂತನೆ ನಡೆಸಲಾಗಿದೆ. ಈ ಅಭಿಯಾನವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಎಲ್ಲಿ ಅಭಿಯಾನ ಆಗಿಲ್ಲ, ಆ ಪ್ರದೇಶಗಳಲ್ಲಿ ಇನ್ನು ಮೂರ್ನಾಲ್ಕು ದಿನ ಕಾಲಾವಕಾಶ ನೀಡಿ ಮುಂದುವರೆಸಲು ಸೂಚಿಸಲಾಗುವುದು” ಎಂದು ತಿಳಿಸಿದರು.

ಮತಪತ್ರದ ಮೂಲಕ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ:

“ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಆಯೋಗವೇ ನಮ್ಮ ಬಳಿ ಸಾಕ್ಷಿ ಕೇಳುತ್ತಿದೆ. ಹೀಗಾಗಿ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ. ಈ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಎಐಸಿಸಿ ಅವರು ತಿಳಿಸಿದ್ದು, ಇದರ ಯಶಸ್ಸು ಬಿಎಲ್ಎಗಳು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ. ಈ ಹೋರಾಟ ಹಮ್ಮಿಕೊಂಡಿರುವ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಅಭಿನಂದಿಸುತ್ತೇನೆ” ಎಂದು ತಿಳಿಸಿದರು.

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಂದೋಲನ:

“ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹದ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾನದ ಅಧ್ಯಯನ ಮಾಡಿ ಅಲ್ಲಿ ನಡೆದಿರುವ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಒಂದೇ ಮನೆಯಲ್ಲಿ 80ಕ್ಕೂ ಹೆಚ್ಚು ಮತಗಳನ್ನು ಸೇರಿಸಲಾಗಿತ್ತು. ಒಂದು ಬಾರ್ ನಲ್ಲಿ 70-80 ಮತದಾರರಿರುವುದನ್ನು ದಾಖಲೆ ಸಮೇತ ಬಹಿರಂಗ ಪಡಿಸಿ ರಾಹುಲ್ ಗಾಂಧಿ ಅವರು ದೇಶದ ಗಮನ ಸೆಳೆದಿದ್ದಾರೆ” ಎಂದು ತಿಳಿಸಿದರು.

“ಈ ಅಕ್ರಮದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳು ಈ ಅಕ್ರಮದ ಬಗ್ಗೆ ಬೆಳಕು ಚೆಲ್ಲಿ ಇಲ್ಲಿಂದ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದರು. ಈ ಅಕ್ರಮ ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ಗಾಂಧಿ ನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರಗಳಿವೆ. ಒಂದು ಕ್ಷೇತ್ರದಲ್ಲಿ ಇರುವ ಮತದಾರರ ಸಂಖ್ಯೆ ಅಷ್ಟೇ ಇದ್ದರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಅಲ್ಪಸಂಖ್ಯಾತರು, ಪರಿಶಿಷ್ಟರು, ಹಿಂದುಳಿದ ವರ್ಗದ ಕುಟುಂಬಗಳ ಸದಸ್ಯರ ಮತವನ್ನು ಬೇರೆ ಬೇರೆ ಬೂತ್ ಗಳಿಗೆ ಹಾಕಿ ವರ್ಗಾವಣೆ ಮಾಡಿರುವ ಷಡ್ಯಂತ್ರ ಬಯಲಾಗಿದೆ” ಎಂದು ವಿವರಿಸಿದರು.

ಆಳಂದ ಕ್ಷೇತ್ರದ ಅಕ್ರಮದ ತನಿಖೆಯ ವರದಿ ಶೀಘ್ರ:

“ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕರು ಹಾಗೂ ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಚುನಾವಣೆಗೂ ಮುನ್ನವೇ ಅಕ್ರಮದ ಬಗ್ಗೆ ದೂರು ನೀಡಿ ಆಯೋಗದ ಗಮನ ಸೆಳೆಯುತ್ತಾರೆ. ನಂತರ ಈ ಅಕ್ರಮದ ಬಗ್ಗೆ ತನಿಖೆ ಆರಂಭವಾಗುತ್ತದೆ. ಚುನಾವಣಾ ಆಯೋಗವು ಅಧಿಕೃತ ದೂರು ದಾಖಲಿಸಿಕೊಳ್ಳುತ್ತದೆ. ಆಳಂದದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಮತದಾರಪಟ್ಟಿಯಿಂದ ಹೆಸರು ಕೈ ಬಿಡುವಂತೆ ನಕಲಿ ಅರ್ಜಿ ಸಲ್ಲಿಸಲಾಗಿತ್ತು. ಕೇವಲ 17 ನಿಮಿಷಗಳಲ್ಲಿ 14 ಮತಗಳನ್ನು ಬೆಳಗಿನ ಜಾವದಲ್ಲಿ ತೆಗೆದುಹಾಕಲಾಗಿರುತ್ತದೆ. ಈ ರೀತಿ 6 ಸಾವಿರ ಮತ ತೆಗೆಯಲು ಪ್ರಯತ್ನಿಸುತ್ತಾರೆ. ಈ ವಿಚಾರವಾಗಿ ಎಸ್ ಐಟಿ ತನಿಖೆ ನಡೆಯುತ್ತಿದ್ದು, ಈ ತನಿಖೆ ಮೂಲಕ ಹೊರ ರಾಜ್ಯದವರು ಹಾಗೂ ಅವರ ದೂರವಾಣಿ ಸಂಖ್ಯೆ ಮೂಲಕ ಮತಗಳನ್ನು ತೆಗೆಸಲು ಷಡ್ಯಂತ್ರ ಮಾಡಲಾಗಿತ್ತು” ಎಂದರು.

“ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗ ಕೆಲಸ ಮಾಡಬೇಕಾಗುತ್ತದೆ. 256 ಬೂತ್ ಗಳಲ್ಲಿ 7250 ಮತಗಳನ್ನು ಫಾರಂ 7 ದುರುಪಯೋಗದ ಮೂಲಕ ಡಿಲೀಟ್ ಮಾಡಿಸಿದ್ದರು. ಉತ್ತರ ಪ್ರದೇಶ, ಬಿಹಾರ, ದೆಹಲಿ, ಜಾರ್ಖಂಡ್ ರಾಜ್ಯಗಳ ಜನರ ಮೊಬೈಲ್ ನಿಂದ ಈ ಅರ್ಜಿ ಸಲ್ಲಿಕೆಯಾಗುತ್ತವೆ. ಈ ಮತದಾರ ಪಟ್ಟಿಯಿಂದ ಹೆಸರು ರದ್ದಾದ 151 ಮತದಾರರು ಫೆ.23ರಂದು ದೂರು ನೀಡುತ್ತಾರೆ. ಅಂದೇ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗುತ್ತದೆ. ಈ ಪ್ರಕರಣದ ತನಿಖೆ ವೇಳೆ ತನಿಖಾಧಿಕಾರಿಗಳು ತಮಗೆ ಬೇಕಾದ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ 12 ಬಾರಿ ಪತ್ರ ಬರೆದಿದ್ದರೂ ಆಯೋಗವು ಯಾವುದೇ ಮಾಹಿತಿ ನೀಡಿಲ್ಲ. ತನಿಖಾಧಿಕಾರಿಗಳು ಹೊರ ರಾಜ್ಯದ 9 ಮೊಬೈಲ್ ಸಂಖ್ಯೆಗಳನ್ನು ಪತ್ತೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರು ಮತದಾರ ಪಟ್ಟಿ ಸೇರಿದಂತೆ ಅನೇಕ ದಾಖಲೆಗಳನ್ನು ಸುಟ್ಟು ಹಾಕಿರುವ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ಪ್ರಕರಣದಲ್ಲಿ ಒಂದು ಮತ ಡಿಲೀಟ್ ಆದರೆ ಅದಕ್ಕೆ 80 ರೂಪಾಯಿ ಹಣ ನೀಡಲಾಗಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಚಿಲುಮೆ ಸಂಸ್ಥೆಯನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದನನ್ನು ನಾವು ಬೆಳಕಿಗೆ ತಂದಿದ್ದೆವು. ಈ ಪ್ರಕರಣದ ತನಿಖಾ ವರದಿ ಶೀಘ್ರದಲ್ಲೇ ಬರಲಿದೆ” ಎಂದರು.

“ಈಗ ಹರಿಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಅವರು ಬೆಳಕು ಚೆಲ್ಲಿದ್ದಾರೆ. ಆ ರಾಜ್ಯದ ಚುನಾವಣೆಯಲ್ಲಿ ಒಟ್ಟು 25 ಲಕ್ಷದಷ್ಟು ಮತಗಳು ಅಕ್ರಮವಾಗಿವೆ ಎಂದು ತಿಳಿಸಿದ್ದಾರೆ. ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸುವುದು ರಾಹುಲ್ ಗಾಂಧಿ ಅವರ ಹೋರಾಟದ ಚಿಂತನೆ. ಕರ್ನಾಟಕ ರಾಜ್ಯದಿಂದಲೇ ಈ ಹೋರಾಟ ಆರಂಭವಾಗಿದ್ದು, ದೇಶದಾದ್ಯಂತ ಜನರಿಂದ ಸಹಿ ಸಂಗ್ರಹ ಮಾಡಿ ಈ ವಿಚಾರದಲ್ಲಿ ರಾಷ್ಟ್ರಪತಿಗಳು ಹಾಗೂ ಚುನಾವಣಾ ಆಯೋಗಕ್ಕೆ ಜನರ ಅಭಿಪ್ರಾಯ ತಿಳಿಸಲು ಈ ಆಂದೋಲನ ಹಮ್ಮಿಕೊಳ್ಳಲಾಗಿದೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಹೋರಾಟ ಮಾತ್ರವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಮತದಾನದ ಹಕ್ಕು ಉಳಿಸುವ ಹೋರಾಟ. ಈ ಸಹಿ ಸಂಗ್ರಹ ಅಭಿಯಾನದಲ್ಲಿ ಸಾರ್ವಜನಿಕರು ಪಕ್ಷಬೇಧ ಮರೆತು ಭಾಗವಹಿಸಿದ್ದಾರೆ” ಎಂದು ತಿಳಿಸಿದರು.

ಒಂದು ವಾರದಲ್ಲಿ ನಿಗಮ ಮಂಡಳಿ ಸದಸ್ಯರ ನೇಮಕ:

ಕಾರ್ಯಕರ್ತರಿಗೆ ನಿಗಮ ಮಂಡಳಿ ಸದಸ್ಯತ್ವ ನೀಡಿಲ್ಲ ಯಾಕೆ ಎಂದು ಕೇಳಿದಾಗ, “ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾನಗಳಿವೆ. ಇವುಗಳನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ” ಎಂದು ತಿಳಿಸಿದರು.

More articles

Latest article