ಮೈಸೂರು: ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಇರುವುದನ್ನು ಬಿಟ್ಟು ತಾಲ್ಲೂಕುಗಳಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆ ಕೇಳಬೇಕು ಎಂದು ಈ ಹಿಂದೆ ಸೂಚನೆ ನೀಡಿದ್ದೆ. ಆದರೂ ಪಾಲನೆ ಆಗುತ್ತಿಲ್ಲ. ಆದ್ದರಿಂದ ಈ ನಿರ್ದೇಶನವನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದಲ್ಲಿ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕರನ್ನು ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ಜನರಿಗೆ ತೊಂದರೆ ನೀಡುವುದು ಅಕ್ಷಮ್ಯ ಅಪರಾಧಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಅಧಿಕಾರಿ ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ ಎಂಬುದನ್ನು ಮರೆಯಬಾರದು. ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಬರುವವರು. ನಾವು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡುವಂತೆ ಅವರು ತಾಕೀತು ಮಾಡಿದರು.
ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಎಂ ಅಸಮಾಧಾನ ವ್ಯಕ್ತಪಡಿಸಿ ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ನಮಗೆ ಹತ್ತಿರದ ಕಾರ್ಯಕರ್ತರ ಮೂಲಕ ಪ್ರಭಾವ ಬೀರಲು ಪ್ರಯತ್ನ ನಡೆಸುತ್ತಿದ್ದು, ಈ ನಡವಳಿಕೆಯನ್ನು ನಾನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸಿಎಂ ಸೂಚನೆಗಳು:
* ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚನೆ.
*ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ ಸಿಎಂ.
*ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನೆ.
*ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.
*ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ ಎಂದು ಪ್ರಶ್ನಿಸಿ, “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.
*ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ನಾನು ಕೊಟ್ಟ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್ಪೆಕ್ಟರ್ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ ಎಂದು ಪ್ರಶ್ನೆ.
*ಹಾಸ್ಟೆಲ್ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು ಎನ್ನುವ ಸ್ಪಷ್ಟ ಸೂಚನೆ.
*ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಿ ಎಂದು ಸೂಚನೆ.
*ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಗರಂ. ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ.

