ನವದೆಹಲಿ: ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ‘ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು’ ಎಂದು ವ್ಯಾಖ್ಯಾನಿಸಿದೆ.
ಲೋಕಸಭೆ , ರಾಜ್ಯಸಭೆ ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಜಾರಿಗೊಳಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಆರ್. ಮಹಾದೇವನ್ ಅವರ ದ್ವಿಸದಸ್ಯ ಪೀಠ ಈ ಅಭಿಪ್ರಾಯಪಟ್ಟಿತು. ಜತೆಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.
ಮುಂದಿನ ಕ್ಷೇತ್ರ ಪುನರ್ ವಿಂಗಡನೆ ಪ್ರಕ್ರಿಯೆವರೆಗೆ ಕಾಯದೇ ಕೂಡಲೇ ಮಹಿಳಾ ಮೀಸಲಾತಿ ಕಾನೂನನ್ನು ಜಾರಿ ಮಾಡಬೇಕು ಎಂದು ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಯಿತು.
ದೇಶದ ಎಲ್ಲಾ ನಾಗರಿಕರು ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ಪಡೆಯಲು ಅರ್ಹರು ಎನ್ನುವುದನ್ನು ಸಂವಿಧಾನದ ಪ್ರಸ್ತಾವನೆಯಲ್ಲೇ ಪ್ರಸ್ತಾಪಿಸಲಾಗಿದೆ. ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತರು ಯಾರು ಎಂದರೆ ಶೇ 48ರಷ್ಟಿರುವ ಮಹಿಳೆಯರು ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಶೋಭಾ ಗುಪ್ತಾ ಬ್ರಿಟಿಷ್ ಆಳ್ವಿಕೆಯಿಂದ ಬಿಡುಗಡೆಗೊಂಡು 75 ವರ್ಷಗಳಾದರೂ ಪ್ರಾತಿನಿಧ್ಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾಗಿ ಬರುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ. ಮಹಿಳೆಯರಿಗೆ ಕೇವಲ ಮೂರನೇ ಒಂದರಷ್ಟು ಮಾತ್ರ ಮೀಸಲಾತಿ ಇದೆ. ಅದಕ್ಕೂ ಯಾವುದೋ ಒಂದು ದತ್ತಾಂಶಕ್ಕೆ ಕಾಯಬೇಕಾಗಿ ಬಂದಿರುವುದು ವಿಪರ್ಯಾಸ ಎಂದು ಹೇಳಿದರು.
2023ರ ಸೆಪ್ಟೆಂಬರ್ನಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಅದೇ ತಿಂಗಳಿನಲ್ಲಿ ರಾಷ್ಟ್ರ ಪತಿ ಸಹಿಯೂ ಬಿದ್ದಿತ್ತು. ಆದರೆ ಇದುವರೆಗೂ ಜಾರಿಯಾಗಿಲ್ಲ.

