ಬೆಂಗಳೂರು: ಯಾವ ಸಂಘವೇ ಆಗಲಿ, ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ ಎಸ್ ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ ಎಂದು ಚಿತ್ತಾಪುರ ಶಾಸಕ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ. ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು.
ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ.
– 300 ಜನರು ಮಾತ್ರ ಭಾಗವಹಿಸಬೇಕು.
– ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ
– ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ
– ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ
ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು ಎಂದಿದ್ದಾರೆ.
ನವೆಂಬರ್ 16ರ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರವರೆಗೆ ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿ
ಆದೇಶ ಹೊರಡಿಸಿದೆ.

