ಬೆಂಗಳೂರು: ನಿನ್ನೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಲಿದೆ. ಬೆಳಗಾವಿಯಲ್ಲಿನ ಹಲಗತ್ತಿಯ ಫಾರ್ಮ್ ಹೌಸ್ ನಲ್ಲಿ ಅವರ ತಾಯಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಮಹಾಂತೇಶ್ ಮತ್ತು ಇಬ್ಬರು ಸಹೋದರರ ಅಂತ್ಯಕ್ರಿಯೆಯೂ ಇಲ್ಲಿಯೇ ನಡೆಯಲಿದೆ.
ಇವರ ನಿಧನಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು, ಶಾಸಕರು ಮತ್ತು ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಮಹಾಂತೇಶ್ ಬೀಳಗಿ ಅವರು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇದಕ್ಕೂ ಮುನ್ನ ಅವರು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದರು. ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿತ್ತು. ಈ ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು.
ಗಾಯಗೊಂಡಿದ್ದ ಬೀಳಗಿ ಅವರ ಸ್ನೇಹಿತ ಈರಣ್ಣ ಸಿರಸಂಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಅಸುನೀಗಿದ್ದಾರೆ.

