ಬೆಳಗಾವಿ: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂಬ ನಿಯಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.
ಪ್ರಶೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾಮಪಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ಸಂಬಂಧಿಸಿದಂತೆ ರಾಜ್ಯಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಕನ್ನಡ ನಾಮಪಲಕ ಅನುಷ್ಠಾನ ಸಂಬಂಧ ನಿಗಾ ವಹಿಸಿ ಕ್ರಮ ಕೈಗೊಳ್ಳಲು ಬೆಂಗಳೂರಿನ 8 ವಲಯ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ. ಪೊಲೀಸ್ ಒಳಗೊಂಡು ವಿವಿಧ ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸದನಕ್ಕೆ ತಿಳಿಸಿದರು.
ಪ್ರಶ್ನೆ ಕೇಳಿದ ಉಮಾಶ್ರೀ ಅವರು ಕನ್ನಡ ನಾಮಪಲಕವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ತಡ ಮಾಡುವುದು ಸರಿಯಿಲ್ಲ ಇದರಿಂದ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕನ್ನಡ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದ, ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯ, ಮನೋರಂಜನಾ ಕೇಂದ್ರ , ಹೋಟೆಲ್ಗಳು ಸೇರಿದಂತೆ ಎಲ್ಲ ರೀತಿಯ ನಾಮಫಲಕಗಳಲ್ಲಿ ಕನ್ನಡಭಾಷೆಯನ್ನು ಶೇ. 60 ರಷ್ಟು ಪುದರ್ಶಿಸಲಾಗಿದೆಯೇ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕನ್ನಡದಲ್ಲಿ ನಾಮಫಲಕ ಆಳವಡಿಸಿಕೊಳ್ಳದ ಸಂಘಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ -2022ರ ಪ್ರಕಾರ ಮೊದಲನೆಯ ಅಪರಾಧಕ್ಕಾಗಿ ರೂ.5 ಸಾವಿರ, ಎರಡನೇ ಅಪರಾಧಕ್ಕೆ ರೂ.10 ಸಾವಿರ ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ ರೂ. 20 ಸಾವಿರವರೆಗೆ ದಂಡ ವಿಧಿಸಬಹುದಾಗಿದೆ ಮತ್ತು ಪರವಾನಗಿಯನ್ನು ರದ್ದುಗೊಳಿಸಬಹುದಾಗಿದೆ ಎಂದು ಹೇಳಿದರು.

