ಬೆಳಗಾವಿ: ರಾಜ್ಯದಲ್ಲಿ ದ್ವೇಷಪೂರಿತ ಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆ ಅಂಗೀಕರಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹುದೊಂದು ಕಾನೂನನ್ನು ಸರ್ಕಾರ ಜಾರಿಗೊಳಿಸುತ್ತಿದೆ.
ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ಕಳೆದ ವಾರ ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಪ್ರತಿ ಪಕ್ಷಗಳ ತೀವ್ರ ವಿರೋಧದ ನಡುವೆಯೇ ಇಂದು ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಮಸೂದೆಯನ್ನು ಡಿಸೆಂಬರ್ 4 ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿತ್ತು.
ದ್ವೇಷ ಭಾಷಣ ಮಾಡಿದರೆ ಈ ಮಸೂದೆಯ ಅಡಿಯಲ್ಲಿ ಒಂದು ಲಕ್ಷ ರೂ.ಗಳವರೆಗೆ ದಂಡ ಮತ್ತು ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶ ಕಲ್ಪಿಸಲಾಗಿದೆ.
ಮಸೂದೆ ಅಂಗೀಕಾರವಾಗುತ್ತಿದ್ದಂತೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಬಿಲ್ ಪ್ರತಿಯನ್ನು ಹರಿದು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಮಧ್ಯೆ ಸಚಿವ ಭೈರತಿ ಸುರೇಶ್ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ನಡುವೆ ಮಾತನ ಚಕಮಕಿ ನಡೆಯಿತು.
ಬೈರತಿ ಸುರೇಶ್ ಮಾತನಾಡಿ ದ್ವೇಷ ಭಾಷಣದಿಂದ ಕರಾವಳಿ ಕರ್ನಾಟಕ ಹೊತ್ತಿ ಉರಿಯುತ್ತಿದೆ. ಅಲ್ಲಿ ಬೆಂಕಿ ಹಚ್ಚಿದ್ದೀರಿ. ಈಗ ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರಿ ಎಂದು ಟೀಕಿಸಿದರು. ಸಚಿವರ ಹೇಳಿಕೆಯನ್ನು ವಿರೋಧಿಸಿದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಗದ್ದಲದ ನಡುವೆಯೇ ಸಭಾಧ್ಯಕ್ಷ ಯುಟಿ ಖಾದರ್ ಅವರು ಸದನವನ್ನು ಮುಂದೂಡಿದರು.
ದ್ವೇಷ ಭಾಷಣ ಮಸೂದೆ ವಿವರ:
ಮೊದಲ ದ್ವೇಷ ಭಾಷಣಕ್ಕೆ 1 ರಿಂದ 7 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ದ್ವೇಷ ಭಾಷಣ ಪುನರಾವರ್ತನೆಯಾದರೆ 2 ವರ್ಷದಿಂದ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತುರೂ. 1 ಲಕ್ಷ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ.
ದ್ವೇಷ ಭಾಷಣ ಪ್ರಸರಣೆ, ಪ್ರಕಟಣೆ, ಪ್ರಚಾರ ತಡೆಯುವ ವಿಧೇಯಕ ಇದಾಗಿದ್ದು, ಯಾವುದೇ ಪೂರ್ವಾಗ್ರಹ ಪೀಡಿತ ಹಿತಾಸಕ್ತಿಯನ್ನು ಪೂರೈಸಲು, ಜೀವಂತ ಅಥವಾ ಸತ್ತ ವ್ಯಕ್ತಿ, ಅಥವಾ ವ್ಯಕ್ತಿಗಳ ಗುಂಪಿನ ವಿರುದ್ಧ ದ್ವೇಷ ಅಥವಾ ದ್ವೇಷದ ಭಾವನೆಗಳನ್ನು ಉಂಟುಮಾಡುವ ಉದ್ದೇಶದಿಂದ ಮಾಡಿದ ಭಾಷಣ, ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಯಾವುದೇ ಅಭಿವ್ಯಕ್ತಿಯನ್ನು ದ್ವೇಷ ಭಾಷಣ ಎಂದು ವರ್ಗೀಕರಿಸಲಾಗಿದೆ.
ಧರ್ಮ, ಜನಾಂಗ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಅಂಗವೈಕಲ್ಯ ಅಥವಾ ಬುಡಕಟ್ಟು ಆಧಾರದ ಮೇಲೆ ಯಾವುದೇ ಪಕ್ಷಪಾತವನ್ನು ದ್ವೇಷ ಭಾಷಣ ಎಂದು ವರ್ಗೀಕರಿಸಲಾಗಿದೆ.
ದ್ವೇಷ ಭಾಷಣ ಮಾಡಿದ್ದಕ್ಕೆ ಪ್ರಕರಣ ದಾಖಲಾದರೆ ಜಾಮೀನು ನೀಡಲಾಗುವುದಿಲ್ಲ. ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ ಅವರು ದ್ವೇಷ ಭಾಷಣಗಳ ವಿಚಾರಣೆ ನಡೆಸಬೇಕು. ದ್ವೇಷ ಭಾಷಣಗಳ ಪ್ರಕರಣಗಳನ್ನು ಕಾರ್ಯ ನಿರ್ವಾಹಕ ಮ್ಯಾಜಿಸ್ಟ್ರೇಟ್ ಅಥವಾ ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲದ ಯಾರೇ ಪೊಲೀಸ್ ಅಧಿಕಾರಿಯು ಮಾಹಿತಿ ಸ್ವೀಕರಿಸಿದರೆ ವಿಚಾರಣೆ ಮಾಡಿ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.
ಮಸೂದೆ ಕುರಿತು ಸಚಿವ ಪರಮೇಶ್ವರ್ ಅವರು ವಿವರಣೆ ನೀಡಿ, ಇತ್ತೀಚಿನ ದಿನಗಳಲ್ಲಿ ಸಮಾಜಕ್ಕೆ ನೋವುಂಟಾಗುವ ರೀತಿಯಲ್ಲಿ ಕೆಲವರು ಭಾಷಣ ಮಾಡುತ್ತಿದ್ದಾರೆ. ಇದರ ಪರಿಣಾಮದಿಂದ ಕೊಲೆಗಳು, ಹೊಡೆದಾಟಗಳು ನಯುತ್ತಿವೆ. ಇಂತಹ ಸಂಘರ್ಷವನ್ನು ನಿಯಂತ್ರಿಸಬೇಕಾದರೆ ಇಂತಹ ಮಸೂದೆ ಅನಿವಾರ್ಯ ಎಂದರು.

