ಬೆಂಗಳೂರು: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ, ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ ಮತ್ತು ಯಾರ ಅಸಾಮರ್ಥ್ಯದಿಂದ ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಶಾ ಅವರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಉತ್ತರಿಸುವಂತೆ ಸವಾಲು ಹಾಕಿದ್ದಾರೆ.
– ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು ಕೇಂದ್ರ ಗೃಹ ಸಚಿವರ ವೈಫಲ್ಯವಲ್ಲವೇ?
– ದೆಹಲಿಯ ಕೆಂಪು ಕೋಟೆ ಬಳಿಯೇ ಸ್ಫೋಟವಾಗುತ್ತದೆ ಎಂದರೆ ಅದು ಕೇಂದ್ರ ಗೃಹ ಸಚಿವರ ಅಸಾಮರ್ಥ್ಯವಲ್ಲವೇ?
– ಪೆಹಲ್ಗಾಮ್ ದಾಳಿಯಾಗುವಾಗ ಅಮಿತ್ ಶಾ ಅವರ ಚಾಣಾಕ್ಷತನ ಎಲ್ಲಿ ಅಡಗಿತ್ತು?
– ವರ್ಷಗಳ ಕಾಲ ಮಣಿಪುರದಲ್ಲಿ ದಂಗೆ ನಡೆಯುತ್ತಿದ್ದುದ್ದನ್ನು ಸುಮ್ಮನೆ ನೋಡುತ್ತಾ ಕುಳಿತಿದ್ದನ್ನು ಅಸಾಮರ್ಥ್ಯ ಎನ್ನಬೇಕೋ ಅಥವಾ ಪರಾಕ್ರಮ ಎನ್ನಬೇಕೋ?
– ಮಹಿಳೆಯರ ಬೆತ್ತಲೆ ಮೆರವಣಿಗೆಯಿಂದ ಇಡೀ ಜಗತ್ತಿನ ಎದುರು ದೇಶದ ಘನತೆ ಮಣ್ಣುಪಾಲಾದಾಗ ಕಣ್ಮುಚ್ಚಿ ಕುಳಿತಿದ್ದು ಅಸಾಮರ್ಥ್ಯವಲ್ಲದೆ ಇನ್ನೇನು?
ಅಮಿತ್ ಶಾ ಅವರ ಸಾಮರ್ಥ್ಯ, ಪರಾಕ್ರಮಗಳಿರುವುದು ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುವುದರಲ್ಲಿ ಮತ್ತು ICCಯನ್ನು ಸಮೃದ್ಧಗೊಳಿಸುವುದರಲ್ಲಿ ಮಾತ್ರವೇ?
ಪ್ರಮೋಷನ್ಗಾಗಿ, ಅಸ್ತಿತ್ವಕ್ಕಾಗಿ ಅಮಿತ್ ಶಾ ಅವರನ್ನು ಸ್ಪರ್ಧೆಗೆ ಬಿದ್ದವರಂತೆ ಸಮರ್ಥಿಸಿಕೊಳ್ಳುವುದು ರಾಜ್ಯದ ಬಿಜೆಪಿ ನಾಯಕರಿಗೆ ಅನಿವಾರ್ಯ ಎಂಬ ಸಂಗತಿ ನಮಗೂ ತಿಳಿದಿದೆ, ಜನತೆಗೂ ತಿಳಿದಿದೆ.
ಮಹಾತ್ಮ ಗಾಂಧಿ, ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ದೇಶ ಕಟ್ಟಿದ ನಾಯಕರ ಬಗ್ಗೆಯೇ ಅಸಂಸದೀಯ ಭಾಷೆಯ ಮೂಲಕ ನಾಲಿಗೆ ಹರಿಬಿಡುವ BJP Karnataka ನಾಯಕರು ಇಂದು “ಅಸಮರ್ಥ“ ಎಂಬ ಪದವನ್ನು ಸಹಿಸಲಾಗದೆ ಒದ್ದಾಡುತ್ತಿರುವುದು ಅವರ ಶೋಚನಿಯ ಸ್ಥಿತಿಗೆ ಹಿಡಿದ ಕನ್ನಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

