ಬೆಂಗಳೂರು: ದೇಶದ ಬಹುತೇಕ ರಾಜ್ಯಗಳ ಜನರ ಖರೀದಿ ಶಕ್ತಿಯು ನಿರೀಕ್ಷಿತ ಮಟ್ಟದಲ್ಲಿ ಇಲ್ಲವಾದರೂ ಕರ್ನಾಟಕದ ಜನರಿಗೆ ಆ ಶಕ್ತಿ ಬಂದಿದೆ. ಇದಕ್ಕೆ ಕಾರಣ ಐದು ಗ್ಯಾರಂಟಿಗಳು ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿದೆ.
ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆಹಾರ ಭದ್ರತೆ, ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ. ಜನರು ಗ್ಯಾರಂಟಿ ಯೋಜನೆಗಳ ಮೂಲಕ ಪಡೆಯುವ ಹಣವನ್ನು ಪೌಷ್ಠಿಕ ಆಹಾರ ಔಷಧಗಳು ಮತ್ತು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಸರ್ಕಾರಿಂದ ನಗದು ವರ್ಗಾವಣೆ ಪಡೆದ ಕುಟುಂಬಗಳ ಪ್ರಮಾಣ 2022 ರಲ್ಲಿ ಶೇ 9.3 ರಷ್ಟಿದ್ದದ್ದು 2024 ರ ವೇಳೆಗೆ ಅದು ಶೇ 72.7 ಕ್ಕೆ ಏರಿಕೆಯಾಗಿದೆ. ಈ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಒತ್ತಿ ಹೇಳಲಾಗಿದೆ.
ಶಕ್ತಿ ಯೋಜನೆಯು ರಾಜ್ಯದ ಮಹಿಳೆಯ ಬದುಕಿನಲ್ಲಿ ನವಚೇತನವನ್ನೇ ಉಂಟು ಮಾಡಿದೆ. ಇಲ್ಲಿನ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅಧ್ಯಯನದ ಪ್ರಕಾರ ಬೆಂಗಳೂರು ನಗರದಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಉಳಿಸಿದ ಹಣದಲ್ಲಿ ಮಹಿಳೆಯರು ಬೇಳೆ ಕಾಳು, ತರಕಾರಿ, ಹಣ್ಣು, ಮೊಟ್ಟೆ ಮತ್ತು ಮಾಂಸ ಮುಂತಾದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಖರೀದಿಸುವ ಶಕ್ತಿ ಪಡೆದುಕೊಂಡಿದ್ದಾರೆ.
ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ. ಮೆಟ್ರೊ ಹಂತ–3 ರ 44.65 ಕಿ.ಮೀ ಯೋಜನೆಗೆ ಅನುಮೋದನೆ ಸಿಕ್ಕಿದ್ದು, ಇದರ ಅಂದಾಜು ವೆಚ್ಚ ರೂ.15,611 ಕೋಟಿಗಳಷ್ಟಿದೆ. ಈ ಯೋಜನೆಯ ಭಾಗವಾಗಿ ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಕಾರಿಡಾರ್ನಲ್ಲಿ ರೂ.9700 ಕೋಟಿ ವೆಚ್ಚದಲ್ಲಿ ದೇಶದ ಮೊದಲ ರಸ್ತೆ ಮತ್ತು ಮೆಟ್ರೊ ಒಳಗೊಂಡಿರುವ ಡಬಲ್ ಡೆಕ್ಕರ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸರ್ಜಾಪುರದಿಂದ ಹೆಬ್ಬಾಳದವರೆಗಿನ 36.59 ಕಿ.ಮೀ ಉದ್ದದ ಮೆಟ್ರೊ–3 ಎ ಯೋಜನೆಉ ವಿಸ್ತೃತ ಯೋಜನಾ ವರದಿ ಅನುಮೋದಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ವಿವರಿಸಲಾಗಿದೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಷಯವನ್ನು ಬಗೆಹರಿಸಲಾಗಿದೆ. ರಾಜ್ಯದ ಜನರ ಜಾತಿವಾರು ಸಮೀಕ್ಷೆ ನಡೆಸಿ ಅವರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಾನಮಾನಗಳ ಸ್ಥಿತಿಗಳನ್ನು ಅಧ್ಯಯನ ಮಾಡಿ ನೀಡಿದ ವರದಿಯ ಆಧಾರದ ಮೇಲೆ ಈ ಸಮುದಾಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. 2025–26 ನೇ ಸಾಲಿನಲ್ಲಿ ಎಸ್ಸಿಎಸ್ಪಿ–ಟಿಎಸ್ಪಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಒಟ್ಟು ರೂ.42,018 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ತಿಳಿಸಲಾಗಿದೆ.

