ಕೋಲಾರ : ಈ ಬೇಸಿಗೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಆದೇಶಿಸಿದ್ದಾರೆ.
ಬೇಸಿಗೆ ಆರಂಭವಾಗಿದ್ದು ಜಿಲ್ಲೆಯ ಆರೂ ತಾಲೂಕುಗಳ ತಹಸೀಲ್ದಾರ್ ಗಳು ಕಡ್ಡಾಯವಾಗಿ ವಾರಕ್ಕೊಮ್ಮೆ ಸಭೆ ನಡೆಸಿ ಕುಡಿಯುವ ನೀರಿನ ಬಗ್ಗೆ ಅವಲೋಕನ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕೆಂದು ತಿಳಿಸಿದರು.
ಈ ಸಭೆಯಲ್ಲಿ ಪಶು ಸಂಗೋಪನೆ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಮನ್ವಯದಿಂದ ಸಮಸ್ಯೆ ಬಗೆಹರಿಸಬೇಕು. ಅಗತ್ಯ ಇರುವ ಕಡೆಗಳಲ್ಲಿ ಹೊಸ ಬೋರ್ ವೆಲ್ ಕೊರೆಸುವುದು, ಹಳೆಯ ಬೋರ್ ವೆಲ್ ಗಳನ್ನು ದುರಸ್ತಿ ಮಾಡುವಂತೆ ಸೂಚನೆ ನೀಡಿದರು.
ತನಿಖೆಗೆ ಆದೇಶ : ಮಾರ್ಕಂಡೇಯ ಜಲಾಶಯದ ಕಾಮಗಾರಿಯಲ್ಲಿ ಆಗಿರುವ ವ್ಯತ್ಯಯ ಮತ್ತು ಕಾಮಗಾರಿ ಮುಗಿಯದೇ ಗುತ್ತಿಗೆದಾರನಿಗೆ 43 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ಆದೇಶ ನೀಡಿದರು. ಅಲ್ಲದೇ, ಹೊಸ ಗುತ್ತಿಗೆದಾರರನ್ನು ನೇಮಿಸಿ ಅದಷ್ಟು ಬೇಗ ನಾಗರಿಕರಿಗೆ ನೀರು ಹರಿಸಲು ಸೂಚನೆ ನೀಡಿದರು.
ಯರಗೋಳ ಜಲಾಶಯದಿಂದ ಬಂಗಾರಪೇಟೆ, ಕೋಲಾರ ಮತ್ತು ಮಾಲೂರು ಪಟ್ಟಣಗಳಿಗೆ ನೀರು ಪೂರೈಸಲಾಗುತ್ತಿದೆ. ಇನ್ನೂ ಕೆಲವು ಪ್ರದೇಶಗಳಿಗೆ ನೀರು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸರಿಗೆ ಜವಾಬ್ದಾರಿ : ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡುವಂತೆ ಹಾಗೂ ಕೆಜಿಎಫ್ ನಲ್ಲಿ ಬಿಜಿಎಂಎಲ್ ಸಂಸ್ಥೆಯಿಂದ ಬರಬೇಕಿರುವ ತೆರಿಗೆ ವಸೂಲು ಮಾಡುವ ಸಂಬಂಧ ಸಂಸ್ಥೆಗೆ ನೋಟಿಸ್ ನೀಡಲಾಗುತ್ತದೆ ಎಂದರು.
ರೈತರನ್ನು ಒಕ್ಕಲೆಬ್ಬಿಸದಂತೆ ಸೂಚನೆ : ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ ಭೂಮಿಯಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡುತ್ತಿರುವ ಸಣ್ಣ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.


