ಬೆಂಗಳೂರು : ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆಗೆ ಹಾಜರಾದ ರಮ್ಯಾ ಅವರ ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ.
ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅನಿಸಿಕೆ ಹಂಚಿಕೊಂಡ ಬಳಿಕ ಕೆಲವರಿಂದ ಅಶ್ಲೀಲ ಸಂದೇಶ ಬಂದಿತ್ತು. ಈ ಹಿನ್ನಲೆ, ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ 11 ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿತ್ತು. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಮ್ಯಾ ಅವರು ವೃತ್ತಿ ಜೀವನ ಮತ್ತು ರಾಜಕೀಯ ಜೀವನದ ಬಗ್ಗೆ ರಮ್ಯಾ ಅವರು ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಖಾತೆ ಬಗ್ಗೆಯೂ ಕೋರ್ಟ್ನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಆರೋಪಿಗಳು ಇನ್ಸ್ಟಾಗ್ರಾಂ ಮೂಲಕ ಕಳುಹಿಸಿದ್ದ ಸಂದೇಶದ ಬಗ್ಗೆಯೂ ರಮ್ಯಾ ಮಾಹಿತಿ ನೀಡಿದ್ದಾರೆ. ಇದನ್ನು ಸೂಕ್ಷ್ಮ ಪ್ರಕರಣವೆಂದು ಪರಿಗಣಿಸಲಾಗಿದೆ. ಹಾಗಾಗಿ ಮುಚ್ಚಿದ ಕೊಠಡಿಯಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ನ್ಯಾಯಾಧೀಶ ಈ. ರಾಜೀವ ಗೌಡ ಅವರು ಇನ್ಕ್ಯಾಮರಾ ಪ್ರೊಸೀಡಿಂಗ್ಸ್ ನಡೆಸಿದ್ದಾರೆ.
ರಮ್ಯಾ ಸಾಮಾಜಿಕ ಜಾಲತಾಣದ ಬಳಕೆಯಲ್ಲಿ ತುಂಬಾ ಆಕ್ಟೀವ್ ಆಗಿದ್ದಾರೆ. ಆದರೆ ಅವರಿಗೆ ಕೆಲವರು ಅಶ್ಲೀಲ ಕಮೆಂಟ್ ಮತ್ತು ಅಸಭ್ಯ ಮೆಸೇಜ್ಗಳನ್ನು ಮಾಡಿದ್ದರು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಟಿ ರಮ್ಯಾ ಪೊಲೀಸರ ಮೊತೆ ಹೋಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 50 ಸಾಮಾಜಿಕ ಜಾಲತಾಣ ಅಕೌಂಟ್ಗಳನ್ನು ಬಂದ್ ಮಾಡಿಸಿದ್ದರು. ಬಂಧನಕ್ಕೆ ಹೆದರಿ 20ಕ್ಕೂ ಹೆಚ್ಚು ಆರೋಪಿಗಳು ಪರಾರಿ ಆಗಿದ್ದರು. ಬಂಧಿತ ಆರೋಪಿಗಳು ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇತರೆ ಭದ್ರತೆಗಳನ್ನು ಒದಗಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು.

