ನವದೆಹಲಿ : ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ದೆಹಲಿ ಹೈಕೋರ್ಟ್ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು.
2025ರ ಮಾರ್ಚ್ನಲ್ಲಿ ದೆಹಲಿಯ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸುಟ್ಟ ಮತ್ತು ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಹೆಚ್ಚಿನ ಪ್ರಮಾಣದ ಹಣದ ಕಂತೆಗಳು ಪತ್ತೆಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಮಹಾಭಿಯೋಗ (ಸರ್ಕಾರಿ ಸೇವೆಯಲ್ಲಿರುವ ವ್ಯಕ್ತಿಯ ಮೇಲೆ ಗಂಭೀರ ಆರೋಪ ಬಂದಾಗ ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಸತ್ತಿಗೆ ಇರುವ ಅಧಿಕಾರವನ್ನು ಮಹಾಭಿಯೋಗ ಎನ್ನುತ್ತಾರೆ) ಪ್ರಕ್ರಿಯೆಯನ್ನು ಪ್ರಾರಂಭಿಸಲು ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯನ್ನು ರಚಿಸಿದ್ದರು.
ತಮ್ಮ ವಿರುದ್ಧದ ಈ ತನಿಖೆಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು
ನ್ಯಾಯಾಧೀಶರು ಅಧಿಕಾರ ತೊರೆದ ನಂತರ ಸಂಸತ್ತಿನ ಮೂಲಕ ಪದಚ್ಯುತಗೊಳಿಸುವ ಪ್ರಕ್ರಿಯೆಯು ಇನ್ನು ಮುಂದೆ ಅನ್ವಯಿಸುವುದಿಲ್ಲವಾದ್ದರಿಂದ, ರಾಜೀನಾಮೆಯು ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968 ರ ಅಡಿಯಲ್ಲಿ ವಿಚಾರಣೆಯನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸುತ್ತದೆ. ಆಗಸ್ಟ್ 2025 ರಲ್ಲಿ ಲೋಕಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ನಂತರ ನ್ಯಾಯಮೂರ್ತಿ ವರ್ಮಾ ಪದಚ್ಯುತಗೊಳಿಸುವ ಕ್ರಮಗಳನ್ನು ಎದುರಿಸುತ್ತಿದ್ದರು ಮತ್ತು ಸ್ಪೀಕರ್ ಓಂ ಬಿರ್ಲಾ ಅವರು ಸ್ಥಾಪಿಸಿದ ಮೂವರು ಸದಸ್ಯರ ವಿಚಾರಣಾ ಸಮಿತಿಯು ಆರೋಪಗಳ ತನಿಖೆ ನಡೆಸುತ್ತಿತ್ತು.

