ಬೆಂಗಳೂರು : ಕಾಂಗ್ರೆಸ್ ಘೋಷಿಸಿರುವ ಅಭ್ಯರ್ಥಿಗಳ ಈ ಪೈಕಿ ಹಾಲಿ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಈ ಪೈಕಿ ಆಡಳಿತಾರೂಢ ಕಾಂಗ್ರೆಸ್ಗೆ ಮೂರು ಸ್ಥಾನಗಳು ಸಿಕ್ಕಿದ್ದು, ಮನ್ಸೂರ್ ಆಲಿ ಖಾನ್, ಪವನ್ ಖೇರಾ ಅವರುಗಳು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮನ್ಸೂರ್ ಅಲಿ ಖಾನ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಮನ್ಸೂರ್ ಅವರು ರಾಜ್ಯಸಭಾ ಮಾಜಿ ಸ್ಪೀಕರ್ ರೆಹಮಾನ್ ಖಾನ್ ಅವರ ಪುತ್ರ. ಅಲ್ಲದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಪಿ.ಸಿ. ಮೋಹನ್ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಅವರಿಗೆ ರಾಜ್ಯಸಭೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಮತ್ತೊಂದು ಸ್ಥಾನವನ್ನು ಹೊರರಾಜ್ಯದವರಿಗೆ ಅಂದರೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರನ್ನು ರಾಜ್ಯದಿಂದ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅವರಿಗೂ ಸಹ ಟಿಕೆಟ್ ಘೋಷಣೆ ಮಾಡಲಾಗಿದ್ದು, ಶುಕ್ರವಾರ ಈ ಮೂವರೂ ಅಭ್ಯರ್ಥಿಗಳು ರಾಹುಲ್ಗಾಂಧಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಜೂ.8 ಕೊನೆಯ ದಿನವಾಗಿದ್ದು, ಮತದಾನ ಅಗತ್ಯವಿದ್ದಲ್ಲಿ ಜೂ.18ರಂದು ನಡೆಸಲು ಮತ್ತು ಅದೇ ದಿನ ಫಲಿತಾಂಶ ಘೋಷಣೆ ಮಾಡಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದೆ.

