ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ನಿಧನರಾಗಿದ್ದಾರೆ. ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ.
ಕೆಲವೇ ಹೊತ್ತಿನಲ್ಲಿ ಆಸ್ಪತ್ರೆಯಿಂದ ಪದ್ಮನಾಭನಗರದ ಮನೆಗೆ ಕರೆತರಲಾಗುತ್ತದೆ. ಹಾಸನದ ಹರದನಹಳ್ಳಿಯ ಮಾವಿನಕೆರೆ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪತ್ನಿ ನಿಧನಕ್ಕೆ ದೇವೇಗೌಡರು ಕಣ್ಣೀರು ಹಾಕಿದ್ದಾರೆ. ಆಸ್ಪತ್ರೆಗೆ ಕುಟುಂಬಸ್ಥರು ಹಾಗೂ ರಾಜಕೀಯ ಮುಖಂಡರು ಭೇಟಿ ನೀಡುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಸಹೋದರ, ಶಾಸಕ ಸಿ.ಎನ್.ಬಾಲಕೃಷ್ಣ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
1954ರಲ್ಲಿ ದೇವೇಗೌಡರೊಂದಿಗೆ ವಿವಾಹವಾಗಿತ್ತು. 72 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದಾರೆ. 2001 ರಲ್ಲಿ ಇವರ ಮೇಲೆ ಆಸಿಡ್ ದಾಳಿಯಾಗಿತ್ತು. ಚೆನ್ನಮ್ಮ ಅವರಿಗೆ 6 ಮಂದಿ ಮಕ್ಕಳು. ಹೆಚ್.ಡಿ.ಬಾಲಕೃಷ್ಣ, ಹೆಚ್.ಡಿ.ರೇವಣ್ಣ, ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರಮೇಶ್ ನಾಲ್ವರು ಗಂಡು ಮಕ್ಕಳು ಹಾಗೂ ಅನಸೂಯ ಹಾಗೂ ಶೈಲಜಾ ಪುತ್ರಿಯರು.
ಎನ್.ಚಲುವರಾಯಸ್ವಾಮಿ ಸಂತಾಪ
ಚೆನ್ನಮ್ಮ ಅವರ ನಿಧನದ ಸುದ್ದಿ ತೀವ್ರ ಆಘಾತ ಮತ್ತು ಬೇಸರವನ್ನುಂಟು ಮಾಡಿದೆ. ಹೆಚ್.ಡಿ. ದೇವೇಗೌಡ ಅವರ ಸುದೀರ್ಘ ರಾಜಕೀಯ ಪಯಣದಲ್ಲಿ ಸದಾ ನೆರಳಾಗಿ ನಿಂತು, ಇಡೀ ಕುಟುಂಬಕ್ಕೆ ದೊಡ್ಡ ಶಕ್ತಿಯಾಗಿದ್ದ ಮಾತೃಶಕ್ತಿಯನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಈ ತೀವ್ರ ದುಃಖವನ್ನು ಭರಿಸುವ ಅವರ ಇಡೀ ಕುಟುಂಬಸ್ಥರು ಮತ್ತು ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

