ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧ ರಾಜ್ಯ ನಾಯಕರು ಸೋಮವಾರ ಮತ್ತೆ ದೆಹಲಿಗೆ ಪ್ರಯಾಣಿಸಲಿದ್ದಾರೆ.
ನೀಟ್ ಅಕ್ರಮದ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಹ ಪ್ರತಿಭಟನೆ ಹಮ್ಮಿಕೊಂಡಿತ್ತು. ಆದರೆ, ಶನಿವಾರ ಪ್ರತಿಭಟನೆ ಕೊನೆಗೊಂಡಿದ್ದರಿಂದ ಸೋಮವಾರ ಹೈಕಮಾಂಡ್ ನಾಯಕರು ಚರ್ಚೆಗೆ ಅವಕಾಶ ನೀಡಬಹದು ಎಂದು ನಿರೀಕ್ಷಿಸಲಾಗುತ್ತಿದೆ.
ಚಿತ್ರದುರ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಸೋಮವಾರ ನವದೆಹಲಿಗೆ ಭೇಟಿ ನೀಡುವ ಸಿಎಂ ರಾಜ್ಯದ ಬರ ಸಂಬಂಧ ಕೇಂದ್ರ ಸರ್ಕಾರಕ್ಕೆ ನಿಯೋಗ ತೆರಳಲು ನವದೆಹಲಿಯಲ್ಲಿ ರಾಜ್ಯದ ಸಂಸದರುಗಳ ಸಭೆ ಕರೆದಿದ್ದಾರೆ.
ಈ ಮಧ್ಯೆ ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಸಹ ಯಾವುದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬಹದು ಎಂದು ಹೇಳಿದ್ದರು. ಈ ಎಲ್ಲಾ ಬೆಳವಣಿಗಳು ಸಚಿವಾಕಾಂಕ್ಷಿಗಳಲ್ಲಿ ಕಾತರ ಹೆಚ್ಚಾಗುವಂತೆ ಮಾಡಿವೆ.
ಈ ಮಧ್ಯೆ ಆಗಸ್ಟ್ 6ರಿಂದ ವಿಧಾನಮಂಡಲ ಅಧಿವೇಶನ ನಡೆಸಲಾಗುವುದು ಎಂದು ಘೋಷಿಸಲಾಗಿದೆ. ಅಧಿವೇಶನಕ್ಕೆ ಕೇವಲ 10 ದಿನ ಬಾಕಿ ಇರುವುದರಿಂದ ಒಂದೆರಡು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡಬೇಕಾದ ಅಗತ್ಯವೂ ಇದೆ.
ಒಂದು ವೇಳೆ ಹೈಕಮಾಂಡ್ ನಾಯಕರು ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆಗೆ ಆಹ್ವಾನಿಸಿದಲ್ಲಿ ಸಿಎಂ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿ ವಿಮಾನ ಹತ್ತಲಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಆಗಿ ಸೋಮವಾರ ನೂತನ ಸಚಿವರ ಪಟ್ಟಿ ಅಂತಿಮಗೊಂಡಲ್ಲಿ ಜು.29ರಂದು ಬುಧವಾರ ನೂತನ ಸಚಿವರ ಪದಗ್ರಹಣ ನಡೆಯಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

