ನವದೆಹಲಿ : ದೇಶದ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿಸಲು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡುವ ಉದ್ದೇಶದಿಂದ, ತಂತ್ರಜ್ಞಾನ ಉದ್ಯಮಿ ಹಾಗೂ ಇನ್ಫೋಸಿಸ್ನ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತಾದ ಉನ್ನತ ಮಟ್ಟದ ಕಾರ್ಯಪಡೆಯೊಂದನ್ನು ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳು ವ್ಯಕ್ತವಾಗಿದ್ದರಿಂದ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ನಡುವೆ, ಶಿಕ್ಷಣ ಸಚಿವಾಲಯದಲ್ಲಿನ ಬದಲಾವಣೆಯ ಭಾಗವಾಗಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಅಧಿಕಾರ ವಹಿಸಿಕೊಂಡ ಮರುದಿನವೇ ಈ ಘೋಷಣೆ ಹೊರಬಿದ್ದಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಹೊಸ ಸಮಿತಿಯ ಬಗ್ಗೆ ಘೋಷಿಸಿದ ಮೋದಿ, ಸಾರ್ವಜನಿಕ ಪರೀಕ್ಷೆಗಳ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳನ್ನು ಈ ಸಮಿತಿಯು ಶಿಫಾರಸು ಮಾಡಲಿದೆ ಎಂದು ಹೇಳಿದರು.
“ವಿಶ್ವವಿಖ್ಯಾತ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲು ನಾವು ನಿರ್ಧರಿಸಿದ್ದೇವೆ. ಈ ಕಾರ್ಯಪಡೆಯು ಪರೀಕ್ಷಾ ಸುಧಾರಣೆಗಳ ಮೇಲೆ ಗಮನಹರಿಸಲಿದೆ ಮತ್ತು ಅದರ ವರದಿಯ ಆಧಾರದ ಮೇಲೆ, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಆದಷ್ಟು ಶೀಘ್ರವೇ ಕ್ರಮಗಳನ್ನು ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.
ಸಾರ್ವಜನಿಕ ಪರೀಕ್ಷೆಗಳ ಪಾವಿತ್ರ್ಯತೆಗೆ ಧಕ್ಕೆ ತಂದ ಆರೋಪಿಗಳ ವಿರುದ್ಧ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರಂತರವಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದವರು ಈಗ ಜೈಲು ಸೇರಿದ್ದಾರೆ. ನಾವು ಈಗಾಗಲೇ ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಿದ್ದೇವೆ. ಅಲ್ಲದೆ, ಕಠಿಣ ಕಾನೂನು ನಿಬಂಧನೆಗಳನ್ನು ಒಳಗೊಂಡ ಹೊಸ ಕಾನೂನನ್ನು ಸಂಸತ್ತಿನಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿಯೂ ನಾವು ಮುಂದಡಿಯಿಡುತ್ತಿದ್ದೇವೆ ಎಂದು ತಿಳಿಸಿದರು.
ಭವಿಷ್ಯದ ದೃಷ್ಟಿಯಿಂದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸುವತ್ತ ಈಗ ಗಮನಹರಿಸಬೇಕಿದೆ ನಾವು ಭವಿಷ್ಯದತ್ತ ನೋಡಬೇಕಿದೆ. ನಮ್ಮ ಪರೀಕ್ಷಾ ವ್ಯವಸ್ಥೆಯು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರಬೇಕು ಹಾಗೂ ತಂತ್ರಜ್ಞಾನದ ಗರಿಷ್ಠ ಬಳಕೆಯನ್ನು ಒಳಗೊಂಡಿರಬೇಕು ಎಂದು ಹೇಳಿದರು.
ಶುಕ್ರವಾರ ಮಧ್ಯರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ಕಾನೂನನ್ನು ಇನ್ನಷ್ಟು ಬಿಗಿಗೊಳಿಸುವುದಾಗಿ ಪ್ರಧಾನಿ ಘೋಷಿಸಿದ ಬೆನ್ನಲ್ಲೇ, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಮಸೂದೆಯ ಕರಡನ್ನು ಕೇಂದ್ರ ಸರ್ಕಾರವು ಸೋಮವಾರ ಸಂಸತ್ತಿನಲ್ಲಿ ಮಂಡಿಸಲು ಸಿದ್ಧವಾಗಿದೆ.
ಸುಧಾರಣಾ ಕ್ರಮಗಳ ಭಾಗವಾಗಿ, ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ಮಾರ್ಗಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಮಂಡಿಸಲಿದೆ. ಈ ಮಸೂದೆಯು ಕಠಿಣ ಶಿಕ್ಷೆಗಳು, ಕಾಲಮಿತಿಯೊಳಗಿನ ತನಿಖೆ ಮತ್ತು ವಿಚಾರಣೆ ಹಾಗೂ ಸಾರ್ವಜನಿಕ ಪರೀಕ್ಷೆಗಳಿಗೆ ಸಂಬಂಧಿಸಿದ ಗಂಭೀರ ಅಪರಾಧಗಳ ತನಿಖೆಗಾಗಿ ವಿಶೇಷ ಕಾರ್ಯಪಡೆಯ (STF) ರಚನೆಯ ಪ್ರಸ್ತಾವನೆಗಳನ್ನು ಒಳಗೊಂಡಿದೆ.

