ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ BPL ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಸಂಶಯಾಸ್ಪದ ಎಂದು ಗುರುತಿಸಲಾಗಿರುವ BPL ಕಾರ್ಡ್ಗಳ ಪಟ್ಟಿಯನ್ನು ಆಹಾರ ಇಲಾಖೆ ಸಿದ್ಧಪಡಿಸಿತ್ತು. ಈ ಹಿನ್ನೆಲೆಯಲ್ಲಿ ಹಲವು ಕಾರ್ಡ್ಗಳು ರದ್ದಾಗುವ ಆತಂಕ ಫಲಾನುಭವಿಗಳಲ್ಲಿ ಉಂಟಾಗಿತ್ತು. ಇದೀಗ ತಾತ್ಕಾಲಿಕವಾಗಿ ಪರಿಷ್ಕರಣೆ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು 2 ಕೋಟಿ 65 ಲಕ್ಷ BPL ಕಾರ್ಡ್ಗಳಿಗೆ ಇ-ಕೆವೈಸಿ ಮಾಡಬೇಕಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ.
ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹತೆ ಇಲ್ಲದ ಅಥವಾ ನಿಯಮಬಾಹಿರವಾಗಿ ಪಡೆದಿರುವ ಕಾರ್ಡ್ಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಪ್ರಕ್ರಿಯೆಯಲ್ಲಿ ಎಷ್ಟು BPL ಕಾರ್ಡ್ಗಳು ರದ್ದಾಗುತ್ತವೆಯೋ, ಅಷ್ಟೇ ಸಂಖ್ಯೆಯಲ್ಲಿ ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ನೀಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ರಿಜ್ವಾನ್ ಅರ್ಷದ್, “ಸದ್ಯಕ್ಕೆ BPL ಕಾರ್ಡ್ಗಳ ಪರಿಷ್ಕರಣೆ ಸ್ಥಗಿತಗೊಳಿಸಲು ಸೂಚನೆ ನೀಡಿದ್ದೇನೆ. ಇ-ಕೆವೈಸಿ ಪೂರ್ಣಗೊಂಡ ಬಳಿಕ ನೈಜ ಫಲಾನುಭವಿಗಳ ಸಂಖ್ಯೆ ಸ್ಪಷ್ಟವಾಗಲಿದೆ” ಎಂದು ತಿಳಿಸಿದ್ದಾರೆ.
ಸಚಿವರ ಈ ನಿರ್ಧಾರದಿಂದ ಕಾರ್ಡ್ ರದ್ದಾಗುವ ಆತಂಕದಲ್ಲಿದ್ದ BPL ಫಲಾನುಭವಿಗಳಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.

